



ಡೈಲಿವಾರ್ತೆ:28/ಏಪ್ರಿಲ್ /2026

ಭಟ್ಕಳ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವ ಕಾರ್ಮಿಕ ಸಾವು

ಭಟ್ಕಳ: ತಾಲೂಕಿನ ಗೋರ್ಟೆ ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪರಿಣಾಮ ಯುವ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಮೃತನನ್ನು ಬಿಹಾರ ಮೂಲದ ಅಭಿನಾಶ್ ಕುಮಾರ್ (28) ಎಂದು ಗುರುತಿಸಲಾಗಿದೆ. ಇವರು ದಿನಗೂಲಿ ಕಾರ್ಮಿಕನಾಗಿ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಅಭಿನಾಶ್ ಕುಮಾರ್ ಅವರು ನಿಜಾಮುದ್ದೀನ್ನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ಮಂಗಳೂರು–ಲಕ್ಷದ್ವೀಪ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಭಟ್ಕಳ ತಾಲೂಕಿನ ಗೋರ್ಟೆ ಸಮೀಪ ಹಾದುಹೋಗುತ್ತಿದ್ದ ವೇಳೆ ಏಕಾಏಕಿ ಸಮತೋಲನ ತಪ್ಪಿ ಕೆಳಗೆ ಬಿದ್ದಿದ್ದು, ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.