



ಡೈಲಿವಾರ್ತೆ: 14/ಮೇ/2026

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ವಾಪಸ್: ಧಾರ್ಮಿಕ ಸಂಕೇತಗಳ ಧರಿಸುವಿಕೆಗೆ ಸರ್ಕಾರದ ಹೊಸ ಆದೇಶ

ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕಳೆದ ಎರಡು ವರ್ಷಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ‘ಹಿಜಾಬ್’ ವಿವಾದಕ್ಕೆ ರಾಜ್ಯ ಸರ್ಕಾರವು ತೆರೆ ಎಳೆದಿದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ 2022 ರಲ್ಲಿ ಅಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಹಿಜಾಬ್ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಲು ಅಧಿಕೃತವಾಗಿ ಅನುಮತಿ ನೀಡಿದೆ.
ಬುಧವಾರ ಸರ್ವಶಿಕ್ಷಣ ಅಭಿಯಾನದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ
ಮಕ್ಕಳ ಹಿತದೃಷ್ಟಿಯಿಂದ ಮತ್ತು ಅವರಿಗೆ ಉಂಟಾಗುತ್ತಿರುವ ಮಾನಸಿಕ ಒತ್ತಡವನ್ನು ನಿವಾರಿಸಲು ನಾವು ಈ ನಿರ್ಧಾರ ಕೈಗೊಂಡಿದ್ದೇವೆ. ಇತ್ತೀಚಿನ ಕೆಲವು ಘಟನೆಗಳಿಂದ ಧಾರ್ಮಿಕ ಸಂಕೇತಗಳನ್ನು ಧರಿಸುವ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಹೀಗಾಗಿ, ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಎಲ್ಲಾ ಧರ್ಮದ ಸಾಂಪ್ರದಾಯಿಕ ವಸ್ತುಗಳಿಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. 1 ರಿಂದ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಈ ಆದೇಶ ಅನ್ವಯವಾಗಲಿದೆ.
ಅನುಮತಿ ನೀಡಲಾದ ಸಂಕೇತಗಳು
ಹೊಸ ಆದೇಶದ ಪ್ರಕಾರ, ವಿದ್ಯಾರ್ಥಿಗಳು ತಮ್ಮ ನಿಗದಿಪಡಿಸಿದ ಸಮವಸ್ತ್ರದ ಜೊತೆಗೆ ಈ ಕೆಳಗಿನ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಬಹುದಾಗಿದೆ:
ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ.
ಶಿವದಾರ, ರುದ್ರಾಕ್ಷಿ. ತಲೆವಸ್ತ್ರ/ಹಿಜಾಬ್.
ಆದರೆ, ಕೇಸರಿ ಶಾಲು ಧರಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗೆ ಸಚಿವರು “ಇಲ್ಲ” ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಮುಖ ಅಂಶಗಳು:
ಸಮವಸ್ತ್ರಕ್ಕೆ ಪೂರಕ: ಸಾಂಪ್ರದಾಯಿಕ ಸಂಕೇತಗಳು ನಿಗದಿತ ಸಮವಸ್ತ್ರದ ಮೂಲ ಉದ್ದೇಶವನ್ನು ವಿಫಲಗೊಳಿಸುವಂತಿರಬಾರದು ಮತ್ತು ಸಮವಸ್ತ್ರಕ್ಕೆ ಪೂರಕವಾಗಿರಬೇಕು.
ಗುರುತಿಸುವಿಕೆಗೆ ಅಡ್ಡಿಯಾಗಬಾರದು: ಇವುಗಳು ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಯ ಗುರುತಿಸುವಿಕೆಗೆ ಯಾವುದೇ ರೀತಿ ಅಡ್ಡಿಪಡಿಸಬಾರದು.
ಪ್ರವೇಶ ನಿರಾಕರಣೆ ನಿಷೇಧ: ಇಂತಹ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಿರುವ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಗೆ ತರಗತಿ ಅಥವಾ ಪರೀಕ್ಷಾ ಕೊಠಡಿಯ ಪ್ರವೇಶವನ್ನು ನಿರಾಕರಿಸುವಂತಿಲ್ಲ.
ಬಲವಂತಕ್ಕೆ ಅವಕಾಶವಿಲ್ಲ: ಇಂತಹ ಸಂಕೇತಗಳನ್ನು ಧರಿಸುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವಂತಿಲ್ಲ ಅಥವಾ ಧರಿಸಿದವರನ್ನು ಬಲವಂತವಾಗಿ ತೆಗೆಯುವಂತೆ ಸೂಚಿಸುವಂತಿಲ್ಲ.
ಸಾಂವಿಧಾನಿಕ ಮೌಲ್ಯಗಳು: ಈ ಆದೇಶವು ಸಮಾನತೆ, ಘನತೆ, ಭಾತೃತ್ವ ಮತ್ತು ಜಾತ್ಯತೀತತೆಯಂತಹ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿರಬೇಕು ಎಂದು ಸರ್ಕಾರಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಹೈಕೋರ್ಟ್ನ ಈ ಹಿಂದಿನ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ನಾವು ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡುವುದಿಲ್ಲ. ಕಾನೂನು ತಜ್ಞರ ತಂಡ ಆ ವಿಷಯವನ್ನು ಗಮನಿಸಲಿದೆ ಎಂದು ಹೇಳಿದರು. ಈ ನಿರ್ಧಾರವು ರಾಜ್ಯದಾದ್ಯಂತ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಸರ್ಕಾರವು ಈ ಆದೇಶವನ್ನು ನಿಷ್ಪಕ್ಷಪಾತವಾಗಿ ಅನುಷ್ಠಾನಗೊಳಿಸಲು ಸೂಚಿಸಿದೆ.