ಡೈಲಿವಾರ್ತೆ: 16/ಮೇ/2026

ಸರಕಾರದ ನಿರ್ಲಕ್ಷ್ಯ ಆರೋಪ: ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಮೊಳಗಿದ ‘ಗೋ ಬ್ಯಾಕ್’ ಘೋಷಣೆ

​ಉಡುಪಿ, ಮೇ 16: ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವು ಸಂಪೂರ್ಣ ಮಲತಾಯಿ ಧೋರಣೆ ತಳೆದಿದೆ ಎಂದು ಆರೋಪಿಸಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ತೀವ್ರ ಸ್ವರೂಪದ ‘ಗೋ ಬ್ಯಾಕ್’ ಪ್ರತಿಭಟನೆ ನಡೆಸಿದರು.

​ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರು, ಉಡುಪಿಯಿಂದ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿಗೆ ತ್ರೈಮಾಸಿಕ ಕೆ.ಡಿ.ಪಿ (KDP) ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸುತ್ತಿದ್ದ ವೇಳೆ ಈ ಹೈಡ್ರಾಮಾ ಸಂಭವಿಸಿದೆ.

​ಸಚಿವರ ವಾಹನಕ್ಕೆ ಮುತ್ತಿಗೆ ಯತ್ನ: ಭದ್ರಕೋಟೆಯಾದ ರಜತಾದ್ರಿ

​ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮೊದಲೇ ಯೋಜನೆ ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಮಣಿಪಾಲದ ರಜತಾದ್ರಿ ಸಂಕೀರ್ಣದ ಮುಂಭಾಗದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
​ಸಚಿವರ ಕಾರು ಸಭೆಯ ಆವರಣ ಪ್ರವೇಶಿಸುತ್ತಿದ್ದಂತೆ ರೊಚ್ಚಿಗೆದ್ದ ಕಾರ್ಯಕರ್ತರು, ಕೊನೆಕ್ಷಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಬದಲು, ತಡೆಗೋಡೆಗಳನ್ನು ಮೀರಿ ಸಚಿವರ ವಾಹನದತ್ತ ಧಾವಿಸಲು ಯತ್ನಿಸಿದರು. ಜಿಲ್ಲೆಯನ್ನು ನಿರ್ಲಕ್ಷಿಸುತ್ತಿರುವ ಉಸ್ತುವಾರಿ ಸಚಿವರೇ ಗೋ ಬ್ಯಾಕ್, ಗೋ ಬ್ಯಾಕ್ ಲಕ್ಷ್ಮಿ ಅಕ್ಕ ಎಂದು ಜೋರಾಗಿ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದರೆ, ಸಚಿವರು ಕಾರಿನ ಮೂಲಕ ನೇರವಾಗಿ ಸಭಾಂಗಣದತ್ತ ತೆರಳಿದರು.

​ಜಿಲ್ಲೆಗೆ ಸಚಿವರದ್ದು ಅಪರೂಪದ ಭೇಟಿ: ಯುವ ಮೋರ್ಚಾ ಆರೋಪ

​ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ, ಸರಕಾರ ಹಾಗೂ ಉಸ್ತುವಾರಿ ಸಚಿವರ ಬೇಜವಾಬ್ದಾರಿತನವನ್ನು ತೀವ್ರವಾಗಿ ಖಂಡಿಸಿದರು.
​”ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಪರೂಪಕ್ಕೆ ಒಮ್ಮೆ ಎಂಬಂತೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯ ಸಾರ್ವಜನಿಕ ಸಾರಿಗೆ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳ ಜ್ವಲಂತ ಸಮಸ್ಯೆಗಳನ್ನು ಆಲಿಸಲು ಮತ್ತು ಬಗೆಹರಿಸಲು ಅವರಿಗೆ ಸಮಯವಿಲ್ಲ. ಈ ಮೂಲಕ ಜಿಲ್ಲೆಯ ಜನರನ್ನು ಹಾಗೂ ಇಲ್ಲಿನ ಸಮಸ್ಯೆಗಳನ್ನು ಅವರು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.