



ಡೈಲಿವಾರ್ತೆ: 31/ಮೇ/2026


ಬೆಳ್ಳಾರೆ ಅಕ್ರಮ ಗೋವಧೆ ಅಡ್ಡೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳ ಬಂಧನ

ಬೆಳ್ಳಾರೆ, ಮೇ.31: ಅಕ್ರಮವಾಗಿ ಗೋವಧೆ ನಡೆಸಿ ಜಾನುವಾರು ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಬೆಳಕಿಗೆ ಬಂದಿದೆ.
ಮೇ 29ರ ಸಂಜೆ ಅಕ್ರಮ ಗೋವಧೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ನೇತೃತ್ವದ ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದೆ. ಕಾರ್ಯಾಚರಣೆ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ತಯಾರಿಸುತ್ತಿರುವುದು ಪತ್ತೆಯಾಗಿದೆ.
ಸ್ಥಳದಲ್ಲಿದ್ದ ಕೆ. ಅಬ್ದುಲ್ ರಫೀಕ್ (37), ಅದ್ರಾಮ ಮಂತೂರು (41) ಹಾಗೂ ಅಬ್ದುಲ್ ಖಾದರ್ ಪಣೆಮಜಲು (57) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗೋವಧೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಪೊಲೀಸರು ಜಾನುವಾರು ಮಾಂಸ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2023ರ ಕಲಂ 4, 7 ಹಾಗೂ 12ರಡಿ ಪ್ರಕರಣ ದಾಖಲಿಸಲಾಗಿದೆ.