ಡೈಲಿವಾರ್ತೆ: 04/ಜೂ./2026

ಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಪ್ರಕರಣ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಆರೋಪಿಗಳ ಬಂಧನ

ಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂಬ ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ.

ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸೂರ್ಯನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಕಿಡ್ನಾಪ್ ಮಾಡಿ ಕರೆದೊಯ್ಯುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಸದ್ಯ ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ.


ಘಟನೆ ವಿವರ:
ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ. ನಿಮಗೆ ಗಿಫ್ಟ್ ಬಂದಿದೆ ಎಂದು ಹೇಳಿ ಕಾಟನ್ ಬಾಕ್ಸ್ ತೋರಿಸಿದ್ದಾರೆ. ಕಾರಿನ ಡೋರ್ ಲಾಕ್ ತೆರೆದ ತಕ್ಷಣ ಓರ್ವ ವ್ಯಕ್ತಿ ಕಾರಿನೊಳಗೆ ನುಗ್ಗಿದ್ದಾನೆ. ಬಳಿಕ ಗನ್ ತೋರಿಸಿ ತಾನು ಹೇಳಿದ ಕಡೆಗೆ ಕಾರು ಚಲಾಯಿಸುವಂತೆ ಸೂಚಿಸಿದ್ದಾನೆ.

ಈ ವೇಳೆ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಹಿಂಬಾಲಿಸಿದ್ದಾರೆ. ಬಳಿಕ ಅತ್ತಿಬೆಲೆ ಕೆಹೆಚ್‌ಬಿ ಬಡಾವಣೆ ಸಮೀಪ ಕರೆದೊಯ್ದು ಬೆದರಿಕೆ ಹಾಕಲಾಗಿದೆ. ನಿನ್ನನ್ನು ಕೊಲ್ಲಲು 10 ಕೋಟಿ ರೂ. ಸುಪಾರಿ ನೀಡಿದ್ದಾರೆ ಎಂದು ಹೇಳಿ ಕುತ್ತಿಗೆಗೆ ಗನ್ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ.

ಈ ವೇಳೆ ಹಣ ನಾನೇ ಕೊಡುತ್ತೇನೆ, ಕೊಲ್ಲಬೇಡಿ ಎಂದು ದಯಾನಂದ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ಮೊದಲು 3 ಕೋಟಿ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಬಳಿಕ 2 ಕೋಟಿ ರೂ.ಗೆ ಒಪ್ಪಿಕೊಂಡಿದ್ದಾರೆ. ಸದ್ಯ ಹಣ ಇಲ್ಲ, ಬೆಳಗ್ಗೆ ಬ್ಯಾಂಕ್ ತೆರೆದ ಬಳಿಕ ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಮಾಡಿದ್ದಾರೆ. ಹಣ ಡ್ರಾ ಮಾಡಿದ ಬಳಿಕ ಕರೆ ಮಾಡುವಂತೆ ಸೂಚಿಸಿ ಆರೋಪಿಗಳು ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ದಯಾನಂದರೆಡ್ಡಿ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.