


ಡೈಲಿವಾರ್ತೆ: 26/ಜೂ./2026


ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ

ಕುಂದಾಪುರ: ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳು ಹಾಗೂ ರೌಡಿಸಂ ನಿಯಂತ್ರಣಕ್ಕೆ ಉಡುಪಿ ಜಿಲ್ಲಾ ಪೊಲೀಸರು ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದು, ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ರೌಡಿಶೀಟರ್ಗಳನ್ನು ಒಂದು ವರ್ಷದ ಅವಧಿಗೆ ಜಿಲ್ಲೆಯ ಹೊರಗೆ ಗಡಿಪಾರು ಮಾಡಲಾಗಿದೆ.
ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ (23), ಕರಾಣಿ ಮುಸೀನ್ (44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ (36) ವಿರುದ್ಧ ಜೂನ್ 24ರಂದು ಗಡಿಪಾರು ಆದೇಶ ಹೊರಡಿಸಲಾಗಿದೆ.
ಗಡಿಪಾರುಗೊಂಡವರಲ್ಲಿ ಮೊಹಮ್ಮದ್ ದಾನೀಶ್ ಮದನಿ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದಾನೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧವೂ ರೌಡಿಹಾಳೆ ತೆರೆಯಲಾಗಿದೆ. ಶಿರ್ವ ಠಾಣಾ ವ್ಯಾಪ್ತಿಯ ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು, ಈತನೂ ರೌಡಿಶೀಟರ್ ಪಟ್ಟಿಯಲ್ಲಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಗಡಿಪಾರು ಕ್ರಮಕ್ಕೆ ಒಳಗಾದ ಬಳಿಕವೂ ಈ ಮೂವರು ಕೊಲೆ, ಕೊಲೆ ಯತ್ನ, ಪೊಲೀಸ್ ಠಾಣೆಗೆ ಕಲ್ಲು ತೂರಾಟ, ಮನೆಕಳ್ಳತನ, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಸೇರಿದಂತೆ ವಿವಿಧ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದು, ಒಟ್ಟು 30 ಪ್ರಕರಣಗಳಲ್ಲಿ ಇವರ ಹೆಸರು ದಾಖಲಾಗಿದೆ.
ಆದೇಶದಂತೆ, ಮೊಹಮ್ಮದ್ ದಾನೀಶ್ ಮದನಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ, ಕರಾಣಿ ಮುಸೀನ್ನನ್ನು ಬೀದರ್ ಜಿಲ್ಲೆಯ ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಗೆ ಹಾಗೂ ಇಲಿಯಾಸ್ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪಿ.ಐ.ಟಿ. ಎನ್ಡಿಪಿಎಸ್ ಕಾಯ್ದೆಯಡಿ ಮೂವರನ್ನು, ಗೂಂಡಾ ಕಾಯ್ದೆಯಡಿ ನಾಲ್ವರನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅಲ್ಲದೆ, 14 ಮಂದಿಯ ವಿರುದ್ಧ ಗಡಿಪಾರು ಕ್ರಮ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.