ಡೈಲಿ ವಾರ್ತೆ : 02 ಮೇ 2022

ಕೇರಳ: ಕಾಸರಗೋಡು ಜಿಲ್ಲೆಯ ಚೆರುವತ್ತೂರು ಪಟ್ಟಣದ ಫುಡ್ ಸ್ಟಾಲ್‌ನಲ್ಲಿ ಶವರ್ಮಾ ಸೇವಿಸಿದ ನಂತರ 17 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಇತರ 18 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ವಿದ್ಯಾರ್ಥಿನಿಯ ಸಾವಿಗೆ ಫುಡ್ ಪಾಯಿಸನ್ ಆಗಿರುವುದೇ ಕಾರಣ ಎಂದು ಶಂಕಿಸಲಾಗಿದೆ. ಮಕ್ಕಳ ತಜ್ಞರನ್ನೊಳಗೊಂಡ ವೈದ್ಯರ ತಂಡವು ಮೃತ ವಿದ್ಯಾರ್ಥಿನಿ ದೇವಾನಂದಳಿಗೆ ಚಿಕಿತ್ಸೆ ನೀಡಿದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ. ಉಳಿದಂತೆ 18 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕಾಸರಗೋಡು ವೈದ್ಯಕೀಯ ಅಧಿಕಾರಿ ತಿಳಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವಿದ್ಯಾರ್ಥಿಗಳು ಶವರ್ಮಾ ಸೇವಿಸಿದ ಅಂಗಡಿಯನ್ನು ಸೀಲ್ ಮಾಡಲಾಗಿದೆ ಮತ್ತು ಅಡುಗೆಯವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.