


ಡೈಲಿವಾರ್ತೆ: 24/ಜು./2026


ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮುರಳಿ ಶೆಟ್ಟಿ ಅವರ ಮನವಿ

ಗೌರವಾನ್ವಿತ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಪಕ್ಷದ ವೀಕ್ಷಕರು (Observers), ಜಿಲ್ಲಾ, ಬ್ಲಾಕ್ ಹಾಗೂ ರಾಜ್ಯ ಮಟ್ಟದ ಮುಖಂಡರು ಮತ್ತು ಪ್ರೀತಿಯ ಕಾರ್ಯಕರ್ತ ಬಂಧುಗಳಿಗೆ ನನ್ನ ಹೃತ್ಪೂರ್ವಕ ವಂದನೆಗಳು.
ನಾನು ಮುರಳಿ ಶೆಟ್ಟಿ, ಇಂದ್ರಾಳಿ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ತತ್ವ, ಸಿದ್ಧಾಂತ ಹಾಗೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ (NSUI) ಸಂಘಟಕರಾಗಿ ಕಾರ್ಯನಿರ್ವಹಿಸಿದ್ದೇನೆ.
ಅಲ್ಲದೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫರ್ನಾಂಡಿಸ್, ಪ್ರತಾಪ್ ಚಂದ್ರ ಶೆಟ್ಟಿ, ವೀರಪ್ಪ ಮೊಯ್ಲಿ, ವಿನಯ ಕುಮಾರ್ ಸೊರಕೆ, ಎಂ.ಎ. ಗಫೂರ್, ಯು.ಆರ್. ಸಭಾಪತಿ ಸೇರಿದಂತೆ ಹಲವು ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಐದು ವರ್ಷಗಳ ಕಾಲ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ, ಏಳು ವರ್ಷ ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ, ನಾಲ್ಕು ವರ್ಷ ಉಡುಪಿ ಜಿಲ್ಲಾ ಇಂಟಕ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಇದರ ಜೊತೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಸದಸ್ಯ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ (PCC) ಸದಸ್ಯರಾಗಿ ವಿವಿಧ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.
ಇತ್ತೀಚೆಗೆ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆ ಹಾಗೂ ಮುಂಬರುವ ವಿಧಾನಸಭಾ ಕ್ಷೇತ್ರವಾರು ವೀಕ್ಷಕರ ಸಭೆಯ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ವಿನಮ್ರ ಮನವಿಯನ್ನು ಸಲ್ಲಿಸುತ್ತಿದ್ದೇನೆ.
ಪಕ್ಷದ ಬೆಳವಣಿಗೆಗಾಗಿ ನಾನು ಸಲ್ಲಿಸಿರುವ ಸೇವೆ, ಸಂಘಟನಾ ಅನುಭವ ಹಾಗೂ ಕಾರ್ಯಕರ್ತರೊಂದಿಗೆ ಬೆಳೆಸಿಕೊಂಡಿರುವ ಆತ್ಮೀಯ ಬಾಂಧವ್ಯವನ್ನು ಪರಿಗಣಿಸಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಗೆ ನನ್ನ ಉಮೇದುವಾರಿಕೆಯನ್ನು ಬೆಂಬಲಿಸಿ, ನನ್ನ ಹೆಸರನ್ನು ಶಿಫಾರಸು ಮಾಡಬೇಕಾಗಿ ಪಕ್ಷದ ಹಿರಿಯ ಹಾಗೂ ಕಿರಿಯ ನಾಯಕರು, ವಿವಿಧ ಹಂತಗಳ ಪದಾಧಿಕಾರಿಗಳು, ಬೂತ್, ಗ್ರಾಮ, ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಎಲ್ಲ ನಾಯಕರು ಮತ್ತು ಕಾರ್ಯಕರ್ತರಲ್ಲಿ ಅತ್ಯಂತ ಗೌರವಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇನೆ.
ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತನನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲು, ಸಂಘಟನೆಯನ್ನು ಬಲಪಡಿಸಲು ಹಾಗೂ ಕಾಂಗ್ರೆಸ್ ಪಕ್ಷದ ಆದರ್ಶಗಳನ್ನು ಜನಸಾಮಾನ್ಯರ ನಡುವೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಮತ್ತು ಉಡುಪಿ ಜಿಲ್ಲೆಯಲ್ಲಿ ಗತಕಾಲದ ಕಾಂಗ್ರೆಸ್ ಅನ್ನು ಪುನಃ ಮರಳಿಸಲು ನನಗೆ ಒಂದು ಅವಕಾಶ ನೀಡುವಂತೆ ಕಳಕಳಿಯಿಂದ ಕೋರುತ್ತೇನೆ.
ಪಕ್ಷದ ತೀರ್ಮಾನವೇ ನನಗೆ ಶಿರೋಧಾರ್ಯ. ಪಕ್ಷದ ಶಿಸ್ತು, ಸಂಘಟನೆಯ ಹಿತಾಸಕ್ತಿ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳಿಗೆ ಸದಾ ಬದ್ಧನಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ವ್ಯಕ್ತಪಡಿಸುತ್ತೇನೆ.
ಇಂತಿ,
ತಮ್ಮ ವಿಶ್ವಾಸಿ,
ಮುರಳಿ ಶೆಟ್ಟಿ, ಇಂದ್ರಾಳಿ
ಕಾಂಗ್ರೆಸ್ ಮುಖಂಡರು