ಡೈಲಿವಾರ್ತೆ:30/ಆಗಸ್ಟ್ /2026

ಹೊಕ್ರಾಣಿ: ಅಶ್ವಿನಿ ಕುಟುಂಬಕ್ಕೆ ಸಾಂತ್ವನ – ಅಂಬೇಡ್ಕರ್ ನಿಗಮದ ಅಧ್ಯಕ್ಷ ಸಿ. ನರೇಂದ್ರ, ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದ ನಿಯೋಗ ಭೇಟಿ

ರಾಯಚೂರು, ಆ.30: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಕುಮಾರಿ ಅಶ್ವಿನಿ ಅವರ ನಿವಾಸಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ. ನರೇಂದ್ರ ಹಾಗೂ ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್, ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಮುಖಂಡರೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ ನಿಯೋಗ, ಅಶ್ವಿನಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದ, ಬಳಿಕ ಕುಟುಂಬದ ಸದಸ್ಯರಿಂದ ಘಟನೆಯ ವಿವರಗಳನ್ನು ಪಡೆದುಕೊಂಡು, ಕುಟುಂಬದ ಪ್ರಸ್ತುತ ಪರಿಸ್ಥಿತಿಯನ್ನು ಅವರಿಗೆ ಅಗತ್ಯವಿರುವ ನೆರವಿನ ಕುರಿತು ಮಾಹಿತಿ ಪಡೆಯಲಾಯಿತು.

ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ನೆರವು ತಲುಪಿಸಲು ಕ್ರಮ:
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ. ನರೇಂದ್ರ ಅವರು ಕುಟುಂಬವನ್ನು ಉದ್ದೇಶಿಸಿ ಮಾತನಾಡಿ, ನೊಂದ ಕುಟುಂಬಕ್ಕೆ ಸರ್ಕಾರದ ವತಿಯಿಂದ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಪರಿಹಾರ ಶೀಘ್ರವಾಗಿ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಶ್ವಿನಿ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಸರ್ಕಾರ ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಪ್ರಕರಣದ ತನಿಖೆ ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ, ನ್ಯಾಯಯುತವಾಗಿ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಬೇಕು. ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಈ ವಿಚಾರದಲ್ಲಿ ನಿರಂತರವಾಗಿ ಧ್ವನಿ ಎತ್ತಲಾಗುವುದು ಎಂದು ಭರವಸೆ ನೀಡಿದರು.

ದಲಿತ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸದಂತೆ ಎಚ್ಚರಿಕೆ:
ಇದೇ ವೇಳೆಯಲ್ಲಿ ದೌರ್ಜನ್ಯ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ದಲಿತ ಮುಖಂಡರು, ಸಂಘಟನೆಗಳ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಹತ್ತಿಕ್ಕುವ ಉದ್ದೇಶದಿಂದ ಸುಳ್ಳು ಕೌಂಟರ್ ಕೇಸ್’ ಪ್ರಕರಣಗಳನ್ನು ದಾಖಲಿಸುವ ಪ್ರಯತ್ನ ನಡೆಯಬಾರದು. ಅಂತಹ ಕ್ರಮಕ್ಕೆ ಅಧಿಕಾರಿಗಳು ಮುಂದಾದರೆ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿ. ನರೇಂದ್ರ ತಿಳಿಸಿದರು.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಇಲಾಖೆಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ | ಮನವಿ ಸ್ವೀಕಾರ
ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸ್ಥಳಕ್ಕೂ ನಿಯೋಗ ಭೇಟಿ ನೀಡಿ, ಪ್ರತಿಭಟನಾಕಾರರೊಂದಿಗೆ ಚರ್ಚಿಸಿ, ಕು. ಅಶ್ವಿನಿ ಪ್ರಕರಣದಲ್ಲಿ ನ್ಯಾಯಯುತ ತನಿಖೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸ್ವೀಕರಿಸಲಾಯಿತು.

ಪ್ರತಿಯೊಂದು ಗ್ರಾಮ ಹಾಗೂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಕುಂದುಕೊರತೆಗಳನ್ನು ಆಲಿಸಲು ನಡೆಯುವ ಸಭೆಗಳನ್ನು ಕೇವಲ ಕಾಟಾಚಾರಕ್ಕೆ ನಡೆಸದೇ, ಜನರ ನೈಜ ಸಮಸ್ಯೆಗಳನ್ನು ದಾಖಲಿಸಿಕೊಂಡು ಅವುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳೊಂದಿಗೆ ಸಭೆ | ಪ್ರಕರಣದ ಕುರಿತು ಮಾಹಿತಿ
ಇದೇ ವೇಳೆ ಅಧಿಕಾರಿಗಳಿಂದ ಪ್ರಕರಣದ ತನಿಖೆಯ ಪ್ರಗತಿಯನ್ನು ಸೂಕ್ತ ಕಾನೂನು ಸುವ್ಯವಸ್ಥೆ ಹಾಗೂ ಕುಟುಂಬಕ್ಕೆ ಕಲ್ಪಿಸಿರುವ ನೆರವಿನ ಕುರಿತು ಮಾಹಿತಿ ಪಡೆಯಲಾಯಿತು. ಸಂತ್ರಸ್ತ ಕುಟುಂಬದ ಸುರಕ್ಷತೆ, ಅವರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳು ಮತ್ತು ಪರಿಹಾರ ಕ್ರಮಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಇದೇ ಸಮಯದಲ್ಲಿ ರಾಜ್ಯ ಎಸ್ಸಿ/ಎಸ್ಟಿ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್, ಜಿಲ್ಲಾ ಎಸ್ಪಿ ಡಾ.ಅರುಣಾಂಗ್ಷು ಗಿರಿ, ರಾಯಚೂರು ಜಿಲ್ಲಾ ಎಡಿಸಿ ಡಾ. ಹಂಪಣ್ಣ ಸಜ್ಜನ್, ಸಿರವಾರ ತಹಸೀಲ್ದಾರ್ ಚಂದ್ರಶೇಖರ ಪವಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರು ಮತ್ತಿತರರು ಉಪಸ್ಥಿತರಿದ್ದರು.

ಪೋಟೋ ಕ್ಯಾಪ್ಷನ್:
ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಕು. ಅಶ್ವಿನಿ ಅವರ ನಿವಾಸಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ ಮತ್ತು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಭೇಟಿ ನೀಡಿದ್ದರು.

ಕೋಟ್:
ಅಶ್ವಿನಿ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಸರ್ಕಾರದ ಜವಾಬ್ದಾರಿ, ಪ್ರಕರಣದ ತನಿಖೆಯನ್ನು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ, ನ್ಯಾಯಯುತವಾಗಿ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು, ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಈ ವಿಚಾರದಲ್ಲಿ ನಿರಂತರವಾಗಿ ಧ್ವನಿ.

  • ಸಿ. ನರೇಂದ್ರ, ಅಧ್ಯಕ್ಷರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಬೆಂಗಳೂರು.