ಡೈಲಿ ವಾರ್ತೆ : 14 ಮೇ 2022

ದೆಹಲಿ : ಭಾರೀ ಅಗ್ನಿ ಅವಘಡ ಸಂಭವಿಸಿ 27 ಜನರು ಸಜೀವ ದಹನವಾಗಿದ್ದು 40 ಜನರಿಗೆ ಗಂಭೀರ ಗಾಯಗಳಾದ ದುರ್ಘಟನೆ ಪಶ್ಚಿಮ ದೆಹಲಿಯ ಮುಂಡ್ಯಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಸಂಭವಿಸಿದೆ.

24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಮುಂಡ್ಯಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಮೂರಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇನ್ನು ಅಗ್ನಿ ಅವಘಡದಲ್ಲಿ ಕನಿಷ್ಠ 27 ಜನರು ಸಜೀವ ದಹನವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಸುಮಾರು 60-70 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು ಇನ್ನು ಹಲವು ಜನ ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಪರಿಹಾರ ನಿಧಿಯಿಂದ 12 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.