ಡೈಲಿ ವಾರ್ತೆ: 03 ನವಂಬರ್ 2022
ಕಳ್ಳತನ ಪ್ರಕರಣದ ಆರೋಪಿ ಪೊಲೀಸರನ್ನು ದೂಡಿ ಹಾಕಿ ಬಸ್ ನಿಂದ ಹಾರಿ ಪರಾರಿಯಾಗಲು ಯತ್ನ: ಸಾರ್ವಜನಿಕರ ಸಹಾಯದಿಂದ ಬೆನ್ನಟ್ಟಿ ಹಿಡಿದ ಪೊಲೀಸರು
ಬಂಟ್ಚಾಳ: ಕಳ್ಳತನ ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪೊಲೀಸರನ್ನು ತಳ್ಳಿ ಬಸ್ ನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸಾರ್ವಜನಿಕರ ಸಹಾಯದಿಂದ ಪೊಲೀಸರು ಈತನನ್ನು ಬಂಧಿಸಿದ್ದಾರೆ.
2003ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕಳ್ಳಿಗೆ ನಿವಾಸಿ ಗಿರೀಶ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ನ್ಯಾಯಾಲಯದ ಅದೇಶದಂತೆ ಪೋಲೀಸರು ಈತನನ್ನು ಪತ್ತೆ ಹಚ್ಚಿ ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಲಯ ಈತನಿಗೆ ಶಿಕ್ಷೆ ಪ್ರಕಟಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸುವ ಸಲುವಾಗಿ ಶಿಕ್ಷಾ ಕೈದಿಯನ್ನು ಸರ್ಕಾರಿ ಬಸ್ ನಲ್ಲಿ ಇಬ್ಬರು ಪೋಲೀಸರು ಬಿಸಿರೋಡಿನಿಂದ ಮಂಗಳೂರಿಗೆ ಸುಮಾರು 6.30 ಗಂಟೆಗೆ ಕರೆದುಕೊಂಡು ಹೋಗುವ ವೇಳೆ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಬಸ್ ನಿಧಾನವಾಗುತ್ತಿದ್ದಂತೆ, ಪೋಲೀಸರನ್ನು ಬಸ್ ನೊಳಗೆ ದೂಡಿ ಹಾಕಿ ಬಸ್ ನಿಂದ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.
ತಕ್ಷಣ ಎಚ್ಚೆತ್ತ ಪೋಲೀಸರು ಆರೋಪಿಯನ್ನು ಬೆನ್ನಟ್ಟಿ ಸಾರ್ವಜನಿಕರ ಸಹಾಯದಿಂದ ಈತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಬೆಂಗಾವಲು ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಲು ಯತ್ನಿಸಿದಕ್ಕಾಗಿ ಈತನ ಮೇಲೆ ಪ್ರಕರಣ ದಾಖಲಾಗಿದೆ.