ಡೈಲಿ ವಾರ್ತೆ: 05 ನವಂಬರ್ 2022
ಪ್ರತಿಭಾ ಕುಳಾಯಿಗೆ ಬಗ್ಗೆ ಅವಹೇಳನ ಪ್ರಕರಣ: ಆರೋಪಿ ಶ್ಯಾಮ ಸುದರ್ಶನ್ ಭಟ್ಗೆ ನಿರೀಕ್ಷಣಾ ಜಾಮೀನು
ಮಂಗಳೂರು: ಸುರತ್ಕಲ್ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ಕೋರ್ಟ್ ನ.9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ.
ಈ ಪ್ರಕರಣದ ಇನ್ನೋರ್ವ ಆರೋಪಿ ಕೆ.ಆರ್. ಶೆಟ್ಟಿಯನ್ನು ಈಗಾಗಲೇ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಟೋಲ್ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಪ್ರತಿಭಾ ಕುಳಾಯಿಯ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಕೆ.ಆರ್. ಶೆಟ್ಟಿ ಸೂಕ್ತ ಶೀರ್ಷಿಕೆ ಕೊಡುವಂತೆ ಕಮೆಂಟ್ ಮಾಡಿದ್ದ. ಇದಕ್ಕೆ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಎಂಬಾತ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದ. ಈ ಬಗ್ಗೆ ಪ್ರತಿಭಾ ಕುಳಾಯಿ ಪೊಲೀಸ್ ಕಮಿಷನರ್ಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು. ಅಲ್ಲದೆ ಆರೋಪಿಗಳ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಮೊರೆ ಹೋಗಿದ್ದು, ನ್ಯಾಯಾಲಯ ನ.9ರವೆರೆಗೆ ಆರೋಪಿಯನ್ನು ಪೊಲೀಸರು ಬಂಧಿಸದಂತೆ ನಿರೀಕ್ಷಣಾ ಜಾಮೀನು ನೀಡಿದೆ.