ಡೈಲಿ ವಾರ್ತೆ: 02 ಡಿಸೆಂಬರ್ 2022

ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು

ಕಡಬ : ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವವರು. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ ಸ್ಟಾಲಿಗೆ ಬಂದ ಪೋಲಿಸ್ ಸಿಬ್ಬಂದಿ ಬೀಮಣ್ಣ ಗೌಡ ಎಂಬವರು ಹಣ ನೀಡುವಂತೆ ಒತ್ತಾಯಿಸಿದ್ದು ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗೆ ನಾನು ಹೆದರಿ 1000 ನೀಡಿದ್ದೇನೆ.

ಈ ಹಣ ಸಾಕಾಗುವುದಿಲ್ಲ. 5000 ನೀಡುವಂತೆ ಪೋಲಿಸ್ ಸಿಬ್ಬಂದಿ ಬೆದರಿಸಿದ್ದು ಅಷ್ಟು ಹಣ ನೀಡದಿದ್ದಾಗ ನನ್ನನ್ನು ಠಾಣೆಯ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾಗಿರುವ ಯುವಕ ಆರೋಪಿಸಿದ್ದಾರೆ.

ಸಂಘಟನೆಯ ಕಾರ್ಯಕರ್ತರು ಜಮಾವಣೆ:
ವಿಷಯ ತಿಳಿದ ‌ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು ನಿನ್ನೆ ಆಸ್ಪತ್ರೆಯಲ್ಲಿ ಜಮಾಯಿಸಿದ್ದು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಯುವಕನಿಗೆ ನ್ಯಾಯ ನೀಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.