ಡೈಲಿ ವಾರ್ತೆ: 14 ಡಿಸೆಂಬರ್ 2022

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಸಚಿವ ಕೋಟ: ಇಲಾಖೆ ಯೋಜನೆಗಳ ಕುರಿತು ಚರ್ಚೆ

ಬೆಂಗಳೂರು: ನವದೆಹಲಿಯ ಸಂಸತ್ ಭವನದಲ್ಲಿಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೊಂದಿಗೆ ಭೇಟಿಯಾದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಪ್ರಧಾನಿಯವರಿಗೆ ಮತ್ಸ್ಯ ದೇವತೆ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ತಮ್ಮ ಇಲಾಖೆಯ ವಿವಿಧ ಯೋಜನೆಗಳು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲಾಖೆಗೆ ಸಂಬಂಧಿಸಿದ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಕರಾವಳಿ ಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿಯೋಜನೆಗಳು, ಮೀನುಗಾರರ ಕಲ್ಯಾಣ ಸಂಬಂಧಿತ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.