ಡೈಲಿ ವಾರ್ತೆ: 26 ಜನವರಿ 2023

74ನೇ ಗಣರಾಜ್ಯೋತ್ಸವ: ಕರ್ನಾಟಕ ರಾಜ್ಯವನ್ನು ಸ್ವಸ್ಥ ಮತ್ತು ಸಮೃದ್ಧವಾಗಿಸೋಣ; ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ಜ‌ನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದರು.

ಸರ್ಕಾರದ ಸಾಧನೆಗಳನ್ನು ವಿವರಿಸಿದ ರಾಜ್ಯಪಾರು, ನಾವೆಲ್ಲರೂ ಸೇರಿ ಕರ್ನಾಟಕ ರಾಜ್ಯವನ್ನು ಸ್ವಸ್ಥ ಮತ್ತು ಸಮೃದ್ಧವಾಗಿಸೋಣ ಹಾಗೂ ದೇಶದ ಸಾರ್ವಭೌಮತ್ವ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡೋಣ ಮತ್ತು ಈ ನಿಟ್ಟಿನಲ್ಲಿ ನಾವು ಮುಂದುವರಿಯೋಣ ಎಂದು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ರಾಜ್ಯದ ಸರ್ವಾಂಗೀಣ ನಿರಂತರ ಅಭಿವೃದ್ಧಿ ಉದ್ದೇಶದೊಂದಿಗೆ ಮೂಲಭೂತ ಸೇವೆಗಳನ್ನು ಒದಗಿಸಲು ವಿಭಿನ್ನ, ನವೀನ ಮತ್ತು ಸರ್ವರನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಾವು ಅಗ್ರಗಣ್ಯ ಸ್ಥಾನದಲ್ಲಿದ್ದೇವೆ ಎಂದು ರಾಜ್ಯಪಾಲರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.