ಬೆಂಗಳೂರು: ಮೌಲ್ಯಮಾಪನ, ಪರೀಕ್ಷಾ ಫಲಿತಾಂಶ ಪ್ರಕಟಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಚದುರಿಸಿದ್ದಾರೆ.



ಬೆಂಗಳೂರು ವಿಶ್ವವಿದ್ಯಾಲಯ ಆಡ್ಮಿನಿಸ್ಟ್ರೇಟಿವ್ ಬ್ಲಾಕ್ ಮುಂಭಾಗ ಏಕಾಏಕಿ ಆಗಮಿಸಿದ ಎಬಿವಿಪಿ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಈ ವೇಳೆ ಮತ್ತೊಂದು ಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು.



ಎಬಿವಿಪಿ ಕಾರ್ಯಕರ್ತರು ಕೂಡ ಅದೇ ಸ್ಥಳಕ್ಕೆ ಆಗಮಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿ ಚದುರಿಸಿದರು. ಇದರಿಂದ ಹಲವು ಮಂದಿ ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿನಿಗೆ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.