ಡೈಲಿ ವಾರ್ತೆ:02 ಮಾರ್ಚ್ 2023

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಬೈಕ್‌‌ಗೆ ಡಿಕ್ಕಿ: ಸವಾರ ಮೃತ್ಯು

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಬೈಕ್ ಸವಾರನನ್ನು ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್‌ (45) ಎಂದು ಗುರುತಿಸಲಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಬಂಕ್‌ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಅವರಿಗೆ ಪೊಲೀಸ್ ವಾಹನ ಡಿಕ್ಕಿಯಾಗಿದೆ.

ಇನ್ನು ಬೈಕ್ ಸವಾರ ರಮೇಶ್ ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ರಮೇಶ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.