ಡೈಲಿ ವಾರ್ತೆ:05 ಮಾರ್ಚ್ 2023

ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ.!

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಯುವಕ ಮಹೇಶ್ (27) ಎಂದು ತಿಳಿದುಬಂದಿದೆ. ಗಿರೀಶ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಮಹೇಶ್ ಆಟೋದಲ್ಲಿ ಕುಳಿತಿದ್ದಾಗ ಗಿರೀಶ್ ದಾಳಿ ನಡೆಸಿದ್ದು, ಮಚ್ಚಿನಿಂದ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹೇಶ್‌ನನ್ನು ಆಸ್ಪತ್ರೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ವೃತ್ತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಕರಕಿ ಕಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.