ಡೈಲಿ ವಾರ್ತೆ:15 ಮಾರ್ಚ್ 2023

ದಕ್ಷಿಣಕನ್ನಡ: ನ್ಯಾಯಾಲಕ್ಕೆ ಹಾಜರಾಗದೆ ತಲೆಮೆರಸಿಕೊಂಡಿದ್ದ ಆರೋಪಿ ರಾಜ ಅಲಿಯಾಸ್ ಜಪಾನ್ ಮಂಗನ ಬಂಧನ

ಮಂಗಳೂರು: ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು, ಕಾವೂರು, ಕುಂಜತ್ತ ಬೈಲ್ ದೇವಿನಗರ ಅತ್ರಾಬೈಲು ನಿವಾಸಿ ರಾಜ ಅಲಿಯಾಸ್ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿ (36) ಬಂಧಿತ ಆರೋಪಿ. ಈತ ಸದ್ಯ ಬೆಂಗಳೂರಿನ ಕೋರಮಂಗಲ ಎಸ್.ಜಿ.ಪಾಳ್ಯ, 1ನೇ ಕ್ರಾಸ್ ಬಳಿ ವಾಸವಾಗಿದ್ದ. ಹೆಸರು ಬದಲಾಯಿಸಿಕೊಂಡು ಬೆಂಗಳೂರಿನಲ್ಲಿ ವಾಸವಾಗಿದ್ದ ಈತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಹಾಜರಾಗದೇ 2017 ಇಸವಿಯಿಂದ ರಾಜ ತಲೆಮರೆಸಿಕೊಂಡಿದ್ದ. ಈತನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ರಾಜ 2013 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆಗೆ ಯತ್ನಿಸಿದ ಪ್ರಕರಣ, ಕಾರಾಗೃಹದಲ್ಲಿ ನಡೆದ ಹಲ್ಲೆ ಪ್ರಕರಣ, ನ್ಯಾಯಾಲಯದ ಆವರಣದಲ್ಲಿ ನಡೆದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ನ್ಯಾಯಾಲಯವು ಎಲ್ ಪಿ ಸಿ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಈತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಮಯ ಬೆಂಗಳೂರಿನಲ್ಲಿ ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ನಕಲಿ ದಾಖಲೆಯನ್ನು ಸೃಷ್ಠಿಸಿ ಹೆಸರು ಮತ್ತು ವಿಳಾಸವನ್ನು ಬದಲಾಯಿಸಿ ಆಧಾರ್ ಕಾರ್ಡ್ ಅನ್ನು ಪಡೆದು ಈ ಮೂಲಕ ಸಿಮ್ ಕಾರ್ಡ್ ನ್ನು ಪಡೆದು ಉಪಯೋಗಿಸುತ್ತಿದ್ದ. ಅಲ್ಲದೇ ಈತನು 2022 ನೇ ಇಸವಿಯಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ, ಎಎಸ್’ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.