ಡೈಲಿ ವಾರ್ತೆ:11 ಮೇ 2023

ಸೋಮೇಶ್ವರ: ಸಮುದ್ರದಲ್ಲಿ ಮುಳುಗಿ ಯುವತಿ ಮೃತ್ಯು

ಉಳ್ಳಾಲ: ಸ್ನೇಹಿತೆಯೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ಬಂದಿದ್ದ ಯುವತಿಯೊಬ್ಬಳು ರುದ್ರಪಾದೆ ಮೇಲಿನಿಂದ ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ (20) ಮೃತಪಟ್ಟ ಯುವತಿ.

ಸ್ಥಳೀಯ ಜೀವರಕ್ಷಕ ಈಜುಗಾರರು ಯುವತಿಯನ್ನು ರಕ್ಷಿಸಲು ಯತ್ನಿಸಿ ದಡಕ್ಕೆ ಎಳೆದು ತಂದು ಪ್ರಥಮ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಕಾರಿಯಾಗದೆ ಮೃತಪಟ್ಟಿದ್ದಾರೆ. ಕಾವೇರಿ ತನ್ನ ಬಾಲ್ಯದ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಬಳಿಕ ಸಮುದ್ರ ತೀರಕ್ಕೆ ತೆರಳಿ ರುದ್ರಪಾದೆ ಏರಿದ್ದರು. ಸಮುದ್ರದ ಅಲೆಗಳನ್ನು ರುದ್ರಪಾದೆಯ ಮೇಲಿನಿಂದ ವೀಕ್ಷಿಸಲು ಇಳಿಜಾರಿನಲ್ಲಿ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬಂದಿ ಮತ್ತು ಸ್ಥಳೀಯರು ಸೇರಿ ಸಮುದ್ರದಲ್ಲಿ ಈಜಾಡಿ ಕಾವೇರಿಯನ್ನು ದಡಕ್ಕೆ ಎಳೆದು ತಂದಿದ್ದಾರೆ.
ಕಾವೇರಿ ಪೋಷಕರು ಕೂಲಿ ಕೆಲಸಗಾರರಾಗಿದ್ದು, ಮಂಗಳೂರಿನ ಉರ್ವಸ್ಟೋರಿನಲ್ಲಿ ಕಳೆದ ಅನೇಕ ವರ್ಷಗಳಿಂದ ನೆಲೆಸಿದ್ದರು.
ಪ್ರತಿಭಾನ್ವಿತೆಯಾಗಿದ್ದ ಕಾವೇರಿ ಬಿಕಾಂ ವ್ಯಾಸಂಗದ ಜತೆಗೆ ಸಿಎ ಕೂಡ ಅಧ್ಯಯನ ನಡೆಸುತ್ತಿದ್ದಳು. ಈಕೆಯ ಗೆಳತಿಯೂ ಮಂಗಳೂರು ನಗರದ ಕಾಲೇಜೊಂದರಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿಯಾಗಿದ್ದಾಳೆ.

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ