ಡೈಲಿ ವಾರ್ತೆ:28 ಜುಲೈ 2023

ಉಡುಪಿಯ ವಿಡಿಯೋ ಪ್ರಕರಣ ಮುಂದಿಟ್ಟು ಸಿಎಂ ಕುಟುಂಬದ ಅವಹೇಳನ:ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ

ಬೆಂಗಳೂರು; ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣ ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ… ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಟ್ವೀಟ್ ಮಾಡಿದ್ದರು.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಇಂದು ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಾಲೇಜಿನ ಶೌಚಾಲಯದಲ್ಲಿ ಯಾವುದೇ ರಹಸ್ಯ ಕ್ಯಾಮೆರಾ ಇರಿಸಿರಲಿಲ್ಲ-ಖುಷ್ಬು ಸುಂದರ್ ಸ್ಪಷ್ಟಣೆ:
ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಯಾವುದೇ ರಹಸ್ಯ ಕ್ಯಾಮೆರಾ ಇರಿಸಿರಲಿಲ್ಲ.‌ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.

ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೊ ಚಿತ್ರೀಕರಣ ಪ್ರಕರಣದ ವಿಚಾರಣೆ ನಡೆಸಲು ಗುರುವಾರ ಕಾಲೇಜಿಗೆ ಭೇಟಿ ನೀಡಿದ ಅವರು ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್‌, ಆಡಳಿತ ಮಂಡಳಿಯ ಪ್ರಮುಖರು, ಸಂತ್ರಸ್ತೆ ಹಾಗೂ ಕಾಲೇಜಿನ ಹಲವು ವಿದ್ಯಾರ್ಥಿನಿಯರ ಜತೆ ಸುದೀರ್ಘ ಚರ್ಚೆ ನಡೆಸಿದರು.

ಘಟನೆ ನಡೆದಿದೆ ಎನ್ನಲಾದ ಕಾಲೇಜಿನ ಶೌಚಾಲಯಕ್ಕೆ ತೆರಳಿ ಪರಿಶೀಲಿಸಿದರು.ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೂ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದರು.

ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣದ ತನಿಖೆ ಆರಂಭಿಸಿದ್ದು ಪೂರ್ಣಗೊಳ್ಳುವವರೆಗೂ ಮಾಧ್ಯಮಗಳು ಆಧಾರರಹಿತ ಸುದ್ದಿ ಪ್ರಕಟಿಸಬಾರದು. ವಿದ್ಯಾರ್ಥಿನಿಯರ ಮೊಬೈಲ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದ್ದು ವರದಿ ಬಂದ ನಂತರ ವಿಡಿಯೊ ಚಿತ್ರೀಕರಣವಾಗಿರುವ ಸತ್ಯಾಸತ್ಯತೆ ಬಯಲಾಗಲಿದೆ’ ಎಂದು ಹೇಳಿದರು.

ಇದಕ್ಕೂ ಮುನ್ನ ಬುಧವಾರ ರಾತ್ರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹಾಗೂ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರೊಂದಿಗೆ ಚರ್ಚಿಸಿದ ಖುಷ್ಬು ಪ್ರಕರಣದ ಮಾಹಿತಿ ಪಡೆದುಕೊಂಡರು.