ಡೈಲಿ ವಾರ್ತೆ: 29 ಜುಲೈ 2023

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ

ಜಾರ್ಖಂಡ್: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಮಂದಿಗೆ ಸುಟ್ಟಗಾಯಗಳಾದ ಘಟನೆ ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಪೀಟರ್ ವಾರ್ ಬ್ಲಾಕ್ ನ ಖೆಟ್ಕೊ ಗ್ರಾಮದಲ್ಲಿ ನಡೆದಿದೆ.

ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊರಹಂ ಮೆರವಣಿಗೆ ಪ್ರಾರಂಭವಾಗಿತ್ತು. ಧ್ವಜ 11,000 ವೋಲ್ಟ್ ಹೈ-ಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.