ಡೈಲಿ ವಾರ್ತೆ: 31/OCT/2023

ಮೆಡಿಕಲ್ ಸೀಟ್ ಕೊಡಿಸುವುದಾಗಿ ಜನರಿಗೆ ಲಕ್ಷಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ತೆಲಂಗಾಣ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಗಾಳ ಹಾಕುತ್ತಿದ್ದ. ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಒಳ್ಳೆಯ ಕಾಲೇಜ್‍ನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ತನಿಖೆಯಲ್ಲಿ ಇದೇ ಮಾದರಿಯಲ್ಲಿ 20ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಹಣ ಕಳೆದುಕೊಂಡವರಲ್ಲಿ ಕೆಲವರು ದೂರು ದಾಖಲಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.