ಡೈಲಿ ವಾರ್ತೆ: 12/NOV/2023

ಉಡುಪಿ: ನೇಜಾರಿನಲ್ಲಿ ಹಂತಕನಿಂದ ಹತ್ಯೆಗೊಳಗಾದ ನಾಲ್ವರು – ಶೌಚಾಲಯದಲ್ಲಿ ಅವಿತು ಕುಳಿತು ಬಾಗಿಲು ಹಾಕಿಕೊಂಡು ಜೀವ ಉಳಿಸಿಕೊಂಡ 70 ರ ವೃದ್ದೆ, ಆರೋಪಿಗಾಗಿ ತೀವ್ರ ಹುಡುಕಾಟ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ತನಿಖೆ ತೀವ್ರಗೊಂಡಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನೇಜಾರಿನಲ್ಲಿ ಇಂದು ಬೆಳಗ್ಗೆ ನಡೆದ ನಾಲ್ವರ ಬರ್ಬರ ಹತ್ಯೆ ವೇಳೆ 70 ವರ್ಷದ ವೃದ್ಧೆ ದುಷ್ಕರ್ಮಿ ಆಕ್ರಮಣದಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ತೆರಳಿ ಬಾಗಿಲು ಹಾಕಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಕೊಲೆಯಾದ ಹಸೀನಾ ಅವರ ಅತ್ತೆ ಹಾಜಿರಾ(70) ದುಷ್ಕರ್ಮಿಯಿಂದ ಪಾರಾದ ವೃದ್ಧೆ.

ಇಂದು ಬೆಳಗ್ಗೆ 8:30ರ ಸುಮಾರಿಗೆ ಹಸೀನಾ ಅವರ ಮನೆಗೆ ಬಂದ ಹಂತಕ ಹಸೀನಾ(42) ಹಾಗೂ ಅವರ ಇಬ್ಬರು ಹೆಣ್ಮಕ್ಕಳಾದ ಅಫ್ನಾನ್ (22), ಆಯ್ನಾಝ್ (21) ಎಂಬವರನ್ನು ಹರಿತವಾದ ಆಯುಧದಿಂದ ಇರಿದು ಕೊಲೆಗೈದಿದ್ದಾನೆ. ಬೊಬ್ಬೆ ಕೇಳಿ ಹೊರಗೆ ಅಂಗಳದಲ್ಲಿ ಸೈಕಲ್ ತುಳಿಯುತ್ತಿದ್ದ ಹಸೀನಾ ಅವರ ಕಿರಿಯ ಪುತ್ರ ಅಸೀಮ್(13) ಮನೆಯೊಳಗೆ ಓಡಿ ಬಂದಿದ್ದಾನೆ. ಈ ವೇಳೆ ಬಾಲಕನನ್ನೂ ಹಂತಕ ಇರಿದು ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಮನೆಯಲ್ಲಿದ್ದ ಹಾಜಿರಾ ಅವರ ಹೊಟ್ಟೆ ಭಾಗಕ್ಕೆ ದುಷ್ಕರ್ಮಿ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ದುಷ್ಕರ್ಮಿಯ ಕೈಯಿಂದ ತಪ್ಪಿಸಿಕೊಂಡು ಮನೆಯ ಶೌಚಾಲಯದೊಳಗೆ ತೆರಳಿ ಬಾಗಿಲು ಮುಚ್ಚಿ ಚಿಲಕ ಹಾಕಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.
ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯೊಳಗೆ ತನಿಖೆ ನಡೆಸುತ್ತಿದ್ದ ವೇಳೆ ಒಳಗಡೆಯಿಂದ ಬಾಗಿಲು ಮುಚ್ಚಿರುವ ಶೌಚಾಲಯವನ್ನು ಗಮನಿಸಿದ್ದಾರೆ. ಈ ವೇಳೆ ಬಾಗಿಲು ತೆರೆಯುವಂತೆ ಪೊಲೀಸರು ಮನವಿ ಮಾಡಿದಾಗ ಹೆದರಿದ್ದ ಹಾಜಿರಾ ಬಾಗಿಲು ತೆರೆಯಲು ಧೈರ್ಯ ತೋರಲಿಲ್ಲ. ಕೊನೆಗೆ ಬಾಗಿಲು ಮುರಿದು ಹಾಜಿರಾರನ್ನು ರಕ್ಷಿಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೊಟ್ಟೆಯ ಎಡಭಾಗಕ್ಕೆ ಇರಿತಕ್ಕೊಳಗಾಗಿರುವ ಹಾಜಿರಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೃತರಲ್ಲಿ ಹಸೀನಾ ಗೃಹಿಣಿಯಾಗಿದ್ದು ಅಫ್ನಾನ್ ಏರ್ ಇಂಡಿಯಾ ಸಂಸ್ಥೆಯಲ್ಲಿ ಗಗನ ಸಖಯಾಗಿ ಸೇವೆ ಸಲ್ಲಿಸುತ್ತಿದ್ದರು. ಆಯ್ನಾಝ್ (21) ಬಿಕಾಮ್ ಲಾಜಿಸ್ಟಿಕ್ ಕಲಿಯುತ್ತಿದ್ದು, ಅಸೀಮ್ (13) ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.
ಇನ್ನೊರ್ವ ಮಗ ಇಂಡಿಗೋ ಸಂಸ್ಥೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ತಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

ವಿಧಿ ವಿಜ್ಞಾನ ಸಂಸ್ಥೆ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶ್ವಾನ ದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ. ಸಿಸಿಟಿವಿ ದೃಶ್ಯಾವಳಿಗಳು ಪರಿಶೀಲನೆ ನಡೆಸಲಾಗುತ್ತಿದ್ದು ಆರೋಪಿಯನ್ನು ಶೀಘ್ರ ಪತ್ತೆ ಹಚ್ಚುವ ಸಾಧ್ಯತೆ ಇದೆ.