ಡೈಲಿ ವಾರ್ತೆ: 28/April/2024

ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿ: 6 ವರ್ಷದ ಬಾಲಕ ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ 100 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 6 ವರ್ಷದ ಬಾಲಕ ಮೃತಪಟ್ಟು,  ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದ ಘಟನೆ ತಾಲೂಕಿನ ದತ್ತಪೀಠದಲ್ಲಿ ಭಾನುವಾರ ಸಂಜೆ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಿನಿ ಬಸ್ ಮಾಡಿಕೊಂಡು 23 ಜನ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸೌಂದರ್ಯ ಸವಿದು ಮಾಣಿಕ್ಯಾಧಾರ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಮಾಣಿಕ್ಯಧಾರ ನೋಡಿಕೊಂಡು ವಾಪಸ್ ಕೆಳಗೆ ಇಳಿಯುವ ಸಂದರ್ಭ ದತ್ತಪೀಠ-ಮಾಣಿಕ್ಯಾಧಾರ ಮಧ್ಯೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಎತ್ತರದಿಂದ ಕೆಳಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ತೀವ್ರ ಅಸ್ವಸ್ಥನಾಗಿದ್ದ 6 ವರ್ಷದ ಬಾಲಕ ಮಹಮದ್‌ ನವಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.