ಡೈಲಿ ವಾರ್ತೆ: 11/ಜೂ./2024

6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ: ರೇಣುಕಾ ಸ್ವಾಮಿ ಹತ್ಯೆ ತನಿಖೆ ಚುರುಕು!

ಸ್ಯಾಂಡಲ್ವುಡ್ ನಟ ದರ್ಶನ್ ಈಗ ಪೊಲೀಸರ ಅತಿಥಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. 6 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡ  ಅವರನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಚಿತ್ರರಂಗನ್ನು ಬೆಚ್ಚಿ ಬೀಳಿಸಿರುವ ಈ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಡಿ ಗ್ಯಾಂಗ್ ಮೇಲೆ ಆರೋಪ ಎದುರಾಗಿದೆ.

ರಾಜಕಾಲುವೆ ಬಳಿ ರೇಣುಕಾ ಸ್ವಾಮಿ ಶವ ಸಿಕ್ಕ ಬಳಿಕ ಪೊಲೀಸರು ತನಿಖೆ ಆರಂಭಿಸಿದರು. ಆಗ ದರ್ಶನ್ ಹೆಸರು ಹೊರಗೆ ಬಂದಿತ್ತು. ಕೂಡಲೇ ದರ್ಶನ್ ಅವರನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಬೆಂಗಳೂರಿಗೆ ಕರೆದುಕೊಂಡು ತನಿಖೆ ಮುಂದುವರಿಸಲಾಯಿತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾ ಗೌಡ, ಕೆ. ಪವನ್ ಸೇರಿದಂತೆ ಎಲ್ಲ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಜಡ್ಜ್ ಮುಂದೆ ಹಾಜರುಪಡಿಸಲಾಯಿತು.

ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ನಟ ದರ್ಶನ್ ಎ2 ಆಗಿದ್ದಾರೆ. ಕೆ. ಪವನ್ ಎ3 ಆಗಿದ್ದಾನೆ. ರೇಣುಕಾ ಸ್ವಾಮಿ ಕೊಲೆಯಿಂದ ಕುಟುಂಬದವರಿಗೆ ಆಘಾತ ಆಗಿದೆ. ದರ್ಶನ್ ಮತ್ತು ಸಹಚರರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಮೃತನ ಕುಟುಂಬದವರು ಒತ್ತಾಯಿಸಿದ್ದಾರೆ.