ಡೈಲಿ ವಾರ್ತೆ: 22/ಜೂ./2024

17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ!

ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು ಎಂದು ಕರೆಯಲಾಗುವ ʻಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ʼನಲ್ಲಿ (MTHL) ಬಿರುಕು ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಳೆದ ಐದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಅಟಲ್‌ ಸೇತುಗೆ ಚಾಲನೆ ನೀಡಿದ್ದರು.ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನಾನಾ ಪಟೋಲೆ ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ತೋರಿಸಿ ರಸ್ತೆ ಸುರಕ್ಷತೆಯ ಬಗ್ಗೆ ಪರಿಶೀಲಿಸಿದ್ದಾರೆ. ಜೊತೆಗೆ ಅದರ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮರದ ಪಟ್ಟಿಯನ್ನು ಬಿರುಕಿನೊಳಗೆ ಇಳಿಸಿ, ಬಿರುಕಿನ ಆಳದ ಪ್ರಮಾಣವನ್ನು ತೋರಿಸಿದ್ದಾರೆ. ಬಳಿಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

ಅಲ್‌ ಸೇತು ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಸೇತುವೆಯ ಬಳಿ ಅರ್ಧ ಕಿಮೀ ನಷ್ಟು ರಸ್ತೆ ಬಿರುಕು ಬಿಟ್ಟಿದೆ. ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ ಎಂದು ಪಟೋಲೆ ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.