ಡೈಲಿ ವಾರ್ತೆ: 03/ಜುಲೈ /2024

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ – ಪ್ರಮುಖ ನಾಯಕರು ವಶಕ್ಕೆ!

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರಕಾರದಿಂದ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಬುಧವಾರ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾ ನಿರತ ನಾಯಕರನ್ನು ತಡೆದು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕೆ, ಮಾಜಿ ಸಚಿವ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಸುರೇಶ್ ಕುಮಾರ್, ಸಿ.ಎನ್. ಅಶ್ವಥ್ ನಾರಾಯಣ್, ಸಿ.ಟಿ. ರವಿ ಸೇರಿದಂತೆ ಪಕ್ಷದ ಮುಖಂಡರು, ಹಲವು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿದ್ದರು.

ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದರಿಂದ, BJP ನಾಯಕರು ಸಿಎಂ ಕಚೇರಿ ಮತ್ತು ನಿವಾಸವನ್ನು ತಲುಪಲು ಸಾಧ್ಯವಾಗಲಿಲ್ಲ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಸುಮಾರು 4,000 ಕೋಟಿ ರೂ. ಮೌಲ್ಯದ ಪರ್ಯಾಯ ನಿವೇಶನ (plots) ಹಗರಣ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಫಲಾನುಭವಿಗಳಲ್ಲಿ ಒಬ್ಬರು ಎಂದು ಪಕ್ಷ ಆರೋಪಿಸಿದೆ.

180 ಕೋಟಿ ರೂ.ಗೂ ಹೆಚ್ಚು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆದಿವೆ ಎಂದು ಬಿಜೆಪಿ ಆರೋಪಿಸಿದೆ, ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯಿತು ಎಂದು ಬಿಜೆಪಿ ಆಕ್ರೋಶ ಹೊರ ಹಾಕಿದೆ.

”ಕಾಂಗ್ರೆಸ್ ಸರಕಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ನಡೆದ ಮುಡಾ ಹಗರಣ ವಾಲ್ಮೀಕಿ ನಿಗಮದಲ್ಲಿನ ಹಗರಣಕ್ಕಿಂತ ದೊಡ್ಡದಾಗಿದೆ” ಎಂದು ವಿಜಯೇಂದ್ರ ಕಿಡಿ ಕಾರಿದರು. ”ಮುಡಾ ಹಗರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳ ಸಮಿತಿಗೆ ವಹಿಸುವ ಬದಲು ಸರಕಾರ ಸಿಬಿಐಗೆ ವಹಿಸಬೇಕು” ಎಂದು ಅಶೋಕ್ ಒತ್ತಾಯಿಸಿದರು.