ಡೈಲಿ ವಾರ್ತೆ: 04/ಜುಲೈ /2024

ಮಾಣಿ ; ಮಂಗಳೂರು – ಬೆಂಗಳೂರು ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕ ತೊಂದರೆಗಳ ಬಗ್ಗೆ ತಹಶೀಲ್ದಾರ್ ಸಭೆ

ಬಂಟ್ವಾಳ : ಮಂಗಳೂರು – ಬೆಂಗಳೂರು ಚತುಷ್ಪಥ ಹೆದ್ದಾರಿಯ ಕಾಮಗಾರಿಯಿಂದ ಸಾರ್ವಜನಿಕವಾಗಿ ಆಗುತ್ತಿರುವ ತೊಂದರೆಗಳ ಬಗ್ಗೆ ವಿಚಾರ ವಿನಿಮಯ ಮಾಡಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರು ನೇತೃತ್ವದಲ್ಲಿ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಲಾಯಿತು.

     ರಸ್ತೆಯ ಬದಿಯ ಮನೆಗಳಿಗೆ ಆಗುತ್ತಿರುವ ಸಮಸ್ಯೆಗಳು, ಕುಡಿಯುವ ನೀರಿನ ಪೈಪ್ ಲೈನುಗಳು, ಒಳ ಮಾರ್ಗಗಳು, ಚರಂಡಿಗಳು, ಶಾಲಾ ಮಕ್ಕಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಲಾಯಿತು. 

  ಈ ಎಲ್ಲಾ ಸಮಸ್ಯೆಗಳಿಗೆ ಶೀಘ್ರವಾಗಿ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವಂತೆ  ತಹಶೀಲ್ದಾರರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

    ಸಭೆಯಲ್ಲಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ.ಕೆ, ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಳ್ವ ಕೊಡಾಜೆ,  ಮೆಲ್ವಿನ್ ಕಿಶೋರ್ ಮಾರ್ಟಿಸ್, ಪ್ರೀತಿ ಡಿನ್ನಾ ಪಿರೇರಾ, ರಮಣಿ.ಡಿ.ಪೂಜಾರಿ, ಸೀತಾ, ನಾರಾಯಣ ಶೆಟ್ಟಿ ಮತ್ತು ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರ ಕಂಪೆನಿಯ ಹಿರಿಯ ಅಭಿಯಂತರ ಮಹೇಂದ್ರ ಸಿಂಗ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನಿರ್ವಾಹಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.