ಡೈಲಿ ವಾರ್ತೆ: 06/ಜುಲೈ /2024

ಬೆಂಗಳೂರು-ಮೈಸೂರು
ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಗಂಭೀರ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ ಕೋಣನಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ತೆರಳುತ್ತಿದ್ದ. ವೇಗವಾಗಿ ಬರುತ್ತಿದ್ದ ಹಿನ್ನೆಲೆ ಎಕ್ಸ್‌ಪ್ರೆಸ್ ವೇಯ ಎಡ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರು ಜಖಂಗೊಂಡಿದೆ.

ಕಾರಿನಲ್ಲಿದ್ದ ಚಾಲಕನ ತಲೆ ಹಾಗೂ ಕೈಗೆ ಗಂಭೀರ ಪೆಟ್ಟು ಬಿದ್ದಿದ್ದು, ರಕ್ತದ ಮಡುವಿನಲ್ಲಿ ಚಾಲಕ ನರಳಾಡಿದ್ದಾರೆ. ಬಳಿಕ ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.