ಡೈಲಿ ವಾರ್ತೆ: 28/ಜುಲೈ /2024

ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ ಕಾಲಿಗೆ ಪೊಲೀಸರಿಂದ ಗುಂಡೇಟು – ಇಬ್ಬರು ಆರೋಪಿಗಳನ್ನು ಬಂಧಿಸಿದ ಕನಕಪುರ ಪೊಲೀಸ್

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್‌ಐ ಮನೋಹರ್ ಅವರು ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಕಳೆದ ವಾರ ಕನಕಪುರ ತಾಲೂಕಿನ ಮಳಗಾಳು ಗ್ರಾಮದ ದಲಿತ ಯುವಕ ಅನೀಶ್ ಅವರ ಎಡಗೈ ಕತ್ತರಿಸಿ ಈ ರೌಡಿ ಶೀಟರ್‌ಗಳು ಪರಾರಿಯಾಗಿದ್ದರು. ಆರೋಪಿಗಳ ಬಂಧಿಸುವಂತೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಇಂದು ಖಚಿತ ಮಾಹಿತಿ ಪಡೆದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಆರೋಪಿಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.