ಡೈಲಿ ವಾರ್ತೆ: 06/ಆಗಸ್ಟ್/2024

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿ

ಬೆಂಗಳೂರು: ರಾಜಧಾನಿಯ ಜನನಿಬಿಡ ಪ್ರದೇಶದಲ್ಲಿ ಎಲೆಕ್ಟ್ರಿಕ್‌ ಬಸ್ಸೊಂದು ಮಳೆಯ ನಡುವೆಯೇ ಹೊತ್ತಿ ಉರಿದು ಬೂದಿಯಾಗಿದೆ.

ನಾಗವಾರ- ಹೆಬ್ಬಾಳ ರಸ್ತೆಯಲ್ಲಿ ನಿನ್ನೆ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮೊದಲು ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಬಸ್ಸಿಂದ ಕೆಳಗಿಳಿದು ಬಚಾವಾಗಿದ್ದಾರೆ. ಅನಂತರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಬೆಂಕಿ ಶಮನವಾಗಿಲ್ಲ. ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ತಲುಪುವ ಮೊದಲೇ ಸಂಪೂರ್ಣ ಬೆಂಕಿ ತಗುಲಿಕೊಂಡು ಬಸ್ಸಿನ ಅಸ್ಥಿಪಂಜರ ಮಾತ್ರ ಉಳಿದಿದೆ.