ಡೈಲಿ ವಾರ್ತೆ: 12/ಆಗಸ್ಟ್/2024

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣು!

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನಗರದ ಐಯುಡಿಪಿ ಲೇಔಟ್ ನಿವಾಸಿ ಮಂಜುನಾಥ (38) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.

ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.