ಡೈಲಿ ವಾರ್ತೆ: 17/ಆಗಸ್ಟ್/2024

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ರಾಜ್ಯಪಾಲರೇ ರಾಜೀನಾಮೆ ನೀಡಬೇಕು – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಪುಟ ಸಭೆ ಬಳಿಕ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಳ್ಳುತ್ತಿದ್ದಾರೆ? ರಾಜ್ಯಪಾಲರ ನಿರ್ಧಾರ ವಿರುದ್ಧ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ:
ರಾಜ್ಯಪಾಲರು ಕಾನೂನು ಬಾಹಿರವಾಗಿ ಅನುಮತಿಸಿದ್ದಾರೆ. ಅವರು ಅನುಮತಿ ನೀಡಿದ್ದು ಕೂಡ ನಿಯಮದಲ್ಲಿ ಇಲ್ಲ. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್​ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರ ಇರುವಂತಹ ಸರ್ಕಾರ. ಬಿಜೆಪಿಯವರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಅವರ ಈ ಪ್ರಯತ್ನ ಯಶಸ್ವಿಯಾಗಲ್ಲ. ನನ್ನ ತೇಜೋವಧೆ ಮಾಡುವುದು ಬಿಜೆಪಿಯವರ ಭ್ರಮೆ. ನಮ್ಮ ಅಭೂತಪೂರ್ವ ಗೆಲುವು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.