ಡೈಲಿ ವಾರ್ತೆ: 24/ಆಗಸ್ಟ್/2024

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ – ತಾಯಿ-ಮಗು ಗಾಯ

ಕೊಡಗು: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ ಮಗುವಿಗೆ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಇನ್ನೂ ಈ ಅಪಘಾತದಿಂದ ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಕಾರನ್ನು ತೆರವುಗೊಳಿಸಿದರು. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.