ಡೈಲಿ ವಾರ್ತೆ: 09/OCT/2024

ಮುಮ್ತಾಝ್ ಅಲಿ ಅಸಹಜ ಸಾವು ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಸೇರಿ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎಂಬವರನ್ನು ಬಂಧಿಸಿ ಕಾವೂರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರುಪಡಿಸಿರುವುದಾಗಿ ಕಾವೂರು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳಿದ್ದು, ನಿನ್ನೆ ಎ1 ರೆಹಮತ್ ಮತ್ತು ಆಕೆಯ ಪತಿ ಶೋಯೆಬ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಇಂದು ಮತ್ತೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ರವರ ನಿರ್ದೇಶನದಂತೆ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುತ್ತಾರೆ. ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಮತ್ತು ಸಿಸಿಬಿ ಎಸ್ ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಕಾವೂರು ಪೊಲೀಸರು ಮಾಹಿತಿ ನೀಡಿದ್ದಾರೆ.