ಡೈಲಿ ವಾರ್ತೆ: 03/ಮಾರ್ಚ್ /2025

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ಕೋಲಾರದ ನಾಲ್ವರು ಸಾವು

ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಇನ್ನೋವಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತರಾಗಿದ್ದಾರೆ.

ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈಚೆಗೆ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಮುಗಿದು ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಬೆಂಗಳೂರಿನಿಂದ ಕಾರಿನಲ್ಲಿ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ.

ಅಪಘಾತ ತಪ್ಪಿಸಲು ಕಾರು ಚಾಲಕ ಪ್ರಯತ್ನಿಸಿದ್ದು ನಿಯಂತ್ರಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.