ಡೈಲಿ ವಾರ್ತೆ: 28/ಮಾರ್ಚ್ /2025

ಮಲ್ಪೆ| ಮಹಿಳೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಆರೋಪಿಗಳ ಪರ ವಕೀಲೆ ಊರ್ಮಿಳಾ ಪುಲ್ಲಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಬಂಧಿತ ಆರೋಪಿಗಳಾದ ಲಕ್ಷ್ಮೀ, ಶಿಲ್ಪ ಮತ್ತು ಸುಂದರ್ ಎಂಬವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ಬಂಧಿತ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗಳ ಪರ ಹಿರಿಯ ವಕೀಲ ಶಾಂತಾರಾಮ್ ಶೆಟ್ಟಿ ವಾದ ಮಂಡಿಸಿದ್ದರು. ಈ ಮಧ್ಯೆ ಹೈಕೋರ್ಟ್ ಮೂವರು ಆರೋಪಿಗಳ ಬಿಡುಗಡೆಗೆ ಆದೇಶ ನೀಡಿತ್ತು. ಆದುದರಿಂದ ಉಳಿದ ಇಬ್ಬರು ಆರೋಪಿಗಳಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.