



ಡೈಲಿ ವಾರ್ತೆ: 09/MAY/2025


ಆಪರೇಷನ್ ಸಿಂದೂರ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಉಡುಪಿ ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಅಬ್ದುಲ್ ಮುತ್ತಾಲಿ ವಂಡ್ಸೆ ಮನವಿ

ಉಡುಪಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಕರುಣಿಸಲು ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಶುಕ್ರವಾರ ಜುಮಾ ನಮಾಜಿನ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಲು ಉಡುಪಿ ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಅಬ್ದುಲ್ ಮುತ್ತಾಲಿ ವಂಡ್ಸೆ ಮನವಿ ಮಾಡಿದ್ದಾರೆ.
ಭಾರತೀಯ ಸೇನೆಯು ಉಗ್ರನೆಲೆಗಳನ್ನು ಧ್ವಂಸ ಮಾಡುವ ಮೂಲಕ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರ ತೀರಿಸಿದೆ. ಭಾರತದ ನೆಮ್ಮದಿಗೆ ಭಂಗ ತರಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಬುದ್ದಿ ಕಲಿಸಿದೆ. ಭಾರತೀಯರ ಮೇಲೆ ಯಾವುದೇ ದಾಳಿ ನಡೆದರೂ ಅದನ್ನು ಹಿಮ್ಮೆಟ್ಟಿಸಲು ದೇಶ ಸನ್ನದ್ಧವಾಗಿದೆ ಎಂಬ ಸಂದೇಶವನ್ನು ತೋರಿಸಿಕೊಟ್ಟಿದೆ. ಇದಕ್ಕಾಗಿ ಸೇನೆಯನ್ನು ಅಭಿನಂದಿಸಿ, ವಿಶೇಷ ಪ್ರಾರ್ಥನೆ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.