



ಡೈಲಿ ವಾರ್ತೆ: 28/MAY/2025


ದುಷ್ಕರ್ಮಿಗಳಿಂದ ಹತ್ಯೆಯಾದ
ಅಬ್ದುಲ್ ರಹಿಮಾನ್ ಮೃತದೇಹ ಸಾಗಾಟ – ಫರಂಗಿಪೇಟೆಯಲ್ಲಿ ರಸ್ತೆ ತಡೆ ನಡೆಸಿ ಗುಂಪಿನಿಂದ ಆಕ್ರೋಶ

ಬಂಟ್ವಾಳ: ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮಂಗಳವಾರ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹ ಸಾಗಾಟದ ಸಂದರ್ಭ ಫರಂಗಿಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಗುಂಪು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ದೇರಳಕಟ್ಟೆಯ ಯೆನೊಪೊಯ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಲಾಯಿತು. ಮಯ್ಯತ್ ನಮಾಝ್ ಬಳಿಕ ಅಲ್ಲಿಂದ ಪೊಲೀಸ್ ಬಂದೋಬಸ್ತ್ ನಲ್ಲಿ ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು ಎಂದು ತಿಳಿದು ಬಂದಿದೆ.
ನೂರಾರು ಮಂದಿ ವಾಹನಗಳಲ್ಲಿ ಆ್ಯಂಬುಲೆನ್ಸ್ ಜೊತೆ ಸಾಗುತ್ತಿದ್ದಾರೆ. ಮೃತದೇಹವು ಕುತ್ತಾರ್, ತೊಕ್ಕೊಟ್ಟು, ಪಂಪ್ ವೆಲ್ ಮಾರ್ಗವಾಗಿ ಫರಂಗಿಪೇಟೆ ತಲುಪಿದಾಗ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರ ಗುಂಪು ರಸ್ತೆ ತಡೆ ನಡೆಸಿ ಹತ್ಯೆಯನ್ನು ಖಂಡಿಸಿದ್ದಾರೆ ಎಂದು ಹೇಳಲಾಗಿದೆ.
ರಹಿಮಾನ್ ಪರ ಘೋಷಣೆಗಳನ್ನು ಕೂಗಿದ ಗುಂಪು ಸರ್ಕಾರದ ವಿರುದ್ಧ ಘೋಷಣೆ ಕೂಗಿತು.
ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿತು ಎನ್ನಲಾಗಿದೆ.
ಆಕ್ರೋಶಿತ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಬಳಿಕ ಪೊಲೀಸರು ಆಕ್ರೋಶಿತರನ್ನು ಸಮಾಧಾನಪಡಿಸಿ ಗುಂಪನ್ನು ಚದುರಿಸಿ ಆ್ಯಂಬುಲೆನ್ಸ್ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ.
ಮೃತದೇಹವನ್ನು ರಹಿಮಾನ್ ಅವರ ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿರುವ ಮನೆಗೆ ಕೊಂಡೊಯ್ಯಲಾಯಿತು.