



ಡೈಲಿ ವಾರ್ತೆ: 05/JUNE/2025


ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಆತ್ಮಹತ್ಯೆ!

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.
ಜನಾನುರಾಗಿಯಾಗಿದ್ದ ಅವರು ಸಜ್ಜನ ರಾಜಕಾರಣಿ ಎಂದೇ ಚಿರಪರಿಚಿತರಾಗಿದ್ದರು. ಅವರ ಮಿತ್ರರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದಾರೆ. ಆರೋಗ್ಯ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ.
ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.