


ಡೈಲಿ ವಾರ್ತೆ: 06/JUNE/2025


ತುಮಕೂರು| ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ – ಮೂವರು ಸಾವು

ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ.
ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ಮೂವರು ಒಂದೇ ಬೈಕ್ ನಲ್ಲಿ ತುಮಕೂರಿಗೆ ವಾಪಸಾಗುವಾಗ ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ.
ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್ಪಿ ಗೋಪಾಲ್, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.