ಡೈಲಿ ವಾರ್ತೆ: 08/ಜುಲೈ/2025

ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ!

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ದುರಂತದ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.

ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ.
ನರೇಂದ್ರ ಅವರು ನಂತರ ಸಮೀಪದಲ್ಲಿ ಇದ್ದ ನೆರೆ ಹೊರೆಯ ನಿವಾಸಿಗಳನ್ನು ಎಬ್ಬಿಸಿ ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಜೋರು ಮಳೆ ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.
ಗ್ರಾಮವು ಭೂಕುಸಿತಕ್ಕೆ ಒಳಗಿದ್ದು ಸುಮಾರು ಒಂದು ಡಜನ್‌ ಮನೆಗಳು ನೆಲಸಮವಾಗಿದೆ. ಗ್ರಾಮದಲ್ಲಿ ಈಗ ಕೇವಲ ನಾಲ್ಕೈದು ಮನೆಗಳು ಮಾತ್ರ ಗೋಚರಿಸುತ್ತಿವೆ. ಉಳಿದವು ಭೂಕುಸಿತದ ಅವಶೇಷಗಳ ಅಡಿಯಲ್ಲಿವೆ.

ಬದುಕುಳಿದವರು ಕಳೆದ 7 ದಿನಗಳಿಂದ ತ್ರಿಯಂಬಲ ಗ್ರಾಮದಲ್ಲಿರುವ ನೈನಾ ದೇವಿ ದೇವಾಲಯದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಒಟ್ಟಿನಲ್ಲಿ ನಾಯಿ ಸರಿಯಾದ ಸಮಯದಲ್ಲಿ ಬೊಗಳಿದ್ದರಿಂದ ಸುಮಾರು 67 ಮಂದಿ ಪಾರಾಗಿದ್ದಾರೆ.