


ಡೈಲಿ ವಾರ್ತೆ: 09/ಜುಲೈ/2025


ಗುಜರಾತ್ ನ ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ: ಮೃತರ ಸಂಖ್ಯೆ 9ಕ್ಕೆ ಏರಿಕೆ!

ಅಹಮದಾಬಾದ್: ಗುಜರಾತ್ ರಾಜ್ಯದ ವಡೋದರಾ ಜಿಲ್ಲೆಯ ಮುಜ್ಪುರ ಬಳಿಯ ನಾಲ್ಕು ದಶಕಗಳಷ್ಟು ಹಳೆಯದಾದ ಗಂಬಿರ ಸೇತುವೆಯ ಒಂದು ಭಾಗ ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸಿ ಮೇಲೆತ್ತಿದರು.
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಬಿರ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನುತ್ತಾರೆ.
ಆದರೆ ಸ್ಥಳೀಯರು ಹೇಳುವುದೇ ಬೇರೆ. ಗಂಬಿರ ಸೇತುವೆ ಬಹಳ ಹಿಂದಿನಿಂದಲೂ ಅಪಾಯಕಾರಿ ಶಿಥಿಲಾವಸ್ಥೆಯಲ್ಲಿತ್ತು. ಸ್ಥಳೀಯರು ಅದರ ಶಿಥಿಲಾವಸ್ಥೆಯ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿ ತುರ್ತು ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದರು, ಆದರೆ ಅವರ ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿತ್ತು.
ಇಂದು ಸೇತುವೆ ಕುಸಿದಿದ್ದರಿಂದ ಆನಂದ್, ವಡೋದರಾ, ಭರೂಚ್ ಮತ್ತು ಅಂಕಲೇಶ್ವರವನ್ನು ಸೌರಾಷ್ಟ್ರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಗಳು ಕಡಿದುಹಾಕಿದೆ, ಇದು ಪ್ರಾದೇಶಿಕ ಸಾರಿಗೆ ಮತ್ತು ವಾಣಿಜ್ಯ ಸಾರಿಗೆ ಸಂಚಾರವನ್ನು ನಿಷ್ಕ್ರಿಯಗೊಳಿಸಿದೆ.
“ಘಟನೆಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಾಂತ್ರಿಕ ತಜ್ಞರನ್ನು ಸ್ಥಳಕ್ಕೆ ತಲುಪಿ ಕುಸಿತದ ಕಾರಣದ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸಿದ್ದಾರೆ ಎಂದು ಅವರು ಹೇಳಿದರು.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡವು ರಕ್ಷಣಾ ಸಾಧನಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದೆ