ಡೈಲಿ ವಾರ್ತೆ: 24/ಆಗಸ್ಟ್/ 2025

ಗಣೇಶೋತ್ಸವ, ಈದ್ ಮಿಲಾದ್‌ಗೆ ಡಿಜೆ ನಿರ್ಬಂಧ ಪ್ರಶ್ನಿಸಿದ ಅರ್ಜಿ ವಜಾ

ಬೆಂಗಳೂರು: ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ನ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಡಿಜೆಗಳು ಮತ್ತು ಸೌಂಡ್ ಸಿಸ್ಟಮ್ಸ್‌ನ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಆ. 14ರಂದು ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆಯ ಪದಾಧಿಕಾರಿಗಳು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾ. ವಿಭು ಬಖ್ರು ಮತ್ತು ನ್ಯಾ.ಸಿ. ಎಂ. ಜೋಷಿ ಅವರ ನ್ಯಾಯಪೀಠ, ಸೌಂಡ್ ಸಿಸ್ಟಮ್ ಮತ್ತು ಡಿಜೆಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ನಿರ್ಬಂಧಿಸಿ ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಲೋಪಗಳಿಲ್ಲ ಎಂದು ಹೇಳಿದೆ.

ವಸತಿ ಪ್ರದೇಶದಲ್ಲಿ ಶಬ್ದದ ಮಟ್ಟವನ್ನು ಹಗಲು 55 ಡೆಸಿಬಲ್ ಮತ್ತು ರಾತ್ರಿ 45 ಡೆಸಿಬಲ್ ಮಟ್ಟಕ್ಕೆ ನಿರ್ಬಂಧಿಸಲಾಗಿದೆ.

ಆದ್ದರಿಂದ ಸಾರ್ವಜನಿಕ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

ಈ ರೀತಿ ಡಿಜೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದರೆ ಸಂವಿಧಾನ ನೀಡಿರುವ ವ್ಯವಹಾರ ಮಾಡುವ ನಮ್ಮ ಮೂಲ ಹಕ್ಕನ್ನು ಉಲ್ಲಂಘಿಸಿದಂತೆ ಆಗುತ್ತದೆ. ಧ್ವನಿವರ್ಧಕದ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ಇರುವಾಗ ಬಳಕೆಯನ್ನು ನಿರ್ಬಂಧಿಸುವುದು ಸಮಂಜಸವಲ್ಲ ಎಂದು ಅರ್ಜಿದಾರರು ವಾದಿಸಿದ್ದರು.