ಡೈಲಿ ವಾರ್ತೆ: 27/ಆಗಸ್ಟ್/ 2025

ಕರಾಟೆ ಸ್ಪರ್ಧೆಯಲ್ಲಿ ಮುಹಮ್ಮದ್ ಮಿಗ್ದಾದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ತಾಲೂಕಿನ ಅಮ್ಟೂರು-ಕರಿಂಗಾಣ ದೇವಮಾತಾ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಎಂ.ಎಚ್.ಮುಹಮ್ಮದ್ ಮಿಕ್ದಾದ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-2026 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಇತ್ತೀಚೆಗೆ ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿತ್ತು.

ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ 14 ವಯೋಮಾನದೊಳಗಿನ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಿಕ್ದಾದ್ ಈ ಸಾಧನೆ ಮಾಡಿದ್ದಾನೆ.

ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದಿದ್ದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಈತ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ. ಈತ ಪಾಣೆಮಂಗಳೂರು- ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ಎಂ.ಎಚ್.ಮುಸ್ತಫಾ ಹಾಗೂ ಫಾಮಿದಾ ದಂಪತಿಯ ಪುತ್ರನಾಗಿದ್ದಾನೆ.