ಡೈಲಿ ವಾರ್ತೆ: 17/ಸೆ./2025

ವಿಜಯಪುರ| SBI ಬ್ಯಾಂಕ್ ದರೋಡೆ: ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ: ಮುಖಕ್ಕೆ ಮುಸುಕು ಹಾಕಿಕೊಂಡು ಹಾಗೂ ಮಿಲಿಟರಿ ಮಾದರಿ ಬಟ್ಟೆ ಹಾಕಿಕೊಂಡು ಬಂದ ದರೋಡೆಕೋರರು ಚಡಚಣ ಪಟ್ಟಣದ ಎಸ್​​​ಬಿಐ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರ ಸಿಬ್ಬಂದಿಗಳ ಕೈಕಾಲು ಕಟ್ಟಿ ಕೂಡಿ ಹಾಕಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆಕೋರರು ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬ್ಯಾಂಕ್ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದ್ದು, ಬ್ಯಾಂಕ್ ನಲ್ಲಿದ್ದ ಅಂದಾಜು 8 ಕೋಟಿ ನಗದು 50ಕೆಜಿ ಚಿನ್ನಾಭರಣ ದೋಚಿ‌ ಪರಾರಿಯಾಗಿದ್ದಾರೆ.

ದರೋಡೆಕೋರರ ಗ್ಯಾಂಗ್ ಬ್ಯಾಂಕ್​ನಿಂದ ಎಷ್ಟು ನಗದು‌, ಚಿನ್ನದ ಆಭರಣಗಳನ್ನು ದರೋಡೆ ಮಾಡಿದ್ದಾರೆ ಎಂಬ
ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶ್ವಾನದಳ, ಬೆರಳಚ್ಚು‌ದಳ‌ ಸಿಬ್ಬಂದಿ ಆಗಮಿಸಿ ಪರೀಕ್ಷೆ ನಡೆಸಿದ್ದಾರೆ. ಬ್ಯಾಂಕ್​ ನಲ್ಲಿರುವ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಬ್ಯಾಂಕ್​ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸುದ್ದಿ ತಿಳಿದು ಬ್ಯಾಂಕ್ ಎದುರಿಗೆ ಸ್ಥಳೀಯರು ಜಮಾಯಿಸಿದ್ದಾರೆ ಎಂದು ತಿಳಿದು ಬಂದಿದೆ.