



ಡೈಲಿ ವಾರ್ತೆ: 04/ಅ./2025

ಉರುಸ್ ಮೆರವಣಿಗೆಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ – ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ, ಬೆಳಗಾವಿ ಉದ್ವಿಗ್ನ

ಬೆಳಗಾವಿ: ಬೆಳಗಾವಿಯ ಖಡೇಬಜಾರ್ನ ಖಡಕ್ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದ ಉರುಸ್ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆಯಿಂದ ಹಿಂದೂ-ಮುಸ್ಲಿಮರ ನಡುವೆ ಜಟಾಪಟಿಗೆ ಕಾರಣವಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ. ಇದು ಸ್ಥಳೀಯ ಹಿಂದೂಗಳನ್ನು ಕೆರಳಿಸಿದ್ದು ಇದಕ್ಕೆ ಆಕ್ಷೇಪಿಸಿದ್ದಾರೆ. ಆದರೆ, ಇದಾದ ಕೆಲಹೊತ್ತಿನಲ್ಲೇ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದ ಆರೋಪ ಕೇಳಿಬಂದಿದೆ.
ಅನುಮತಿ ಇಲ್ಲದೆ ಖಡಕ್ ಗಲ್ಲಿಯಲ್ಲಿ ಮೆರವಣಿಗೆ ಆರೋಪ:
ಪ್ರತಿ ವರ್ಷ ಜಾಲ್ಗಾರ ಗಲ್ಲಿ ಮತ್ತು ಶನಿವಾರ ಕೂಟ ಗಲ್ಲಿ ಮೂಲಕ ದರ್ಗಾಕ್ಕೆ ಉರುಸ್ ಮೆರವಣಿಗೆ ಹೋಗುತ್ತಿತ್ತು. ಆದರೆ, ಈ ಬಾರಿ ಪೊಲೀಸರ ಅನುಮತಿ ಇಲ್ಲದಿದ್ದರೂ ಮರಾಠಿ ಸಮುದಾಯದವರೇ ಹೆಚ್ಚಿರುವ ಖಡಕ್ ಗಲ್ಲಿಯಲ್ಲಿ ಉರುಸ್ ಮೆರವಣಿಗೆ ಸಾಗಿದೆ. ಇದೇ ಸ್ಥಳೀಯ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ, ಡಿಸಿಪಿ ನಾರಾಯಣ ಭರಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಲ್ಲುತೂರಾಟ ಮಾಡಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ದಾವಣಗೆರೆಯಲ್ಲೂ ಸಂಘರ್ಷಕ್ಕೆ ಕಾರಣವಾಗಿದ್ದ ‘ಐ ಲವ್ ಮೊಹಮ್ಮದ್’!
ಕೆಲವು ದಿನಗಳ ಹಿಂದಷ್ಟೇ ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಕೂಡ ‘ಐ ಲವ್ ಮೊಹಮ್ಮದ್’ ಫ್ಲೆಕ್ಸ್ ಹಾಕಿದ್ದ ವಿಚಾರ ಹಿಂದೂ-ಮುಸ್ಲಿಮರ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು. ಕಲ್ಲು ತೂರಾಟ ಕೂಡ ನಡೆದಿತ್ತು. ‘ಐ ಲವ್ ಮೊಹಮ್ಮದ್’ ಎಂಬ ಬರಹವುಳ್ಳ ಫ್ಲೆಕ್ಸ್ ಹಾಕಿದ್ದನ್ನು ಹರಿದು ಹಾಕಲಾಗಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟಿದ್ದರಿಂದ ಸಂಘರ್ಷ ಆರಂಭವಾಗಿತ್ತು.