ಡೈಲಿ ವಾರ್ತೆ: 05/NOV/2025

ಪಣಂಬೂರು| ಕೌಟುಂಬಿಕ ಕಲಹದಿಂದ ಮನನೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ತಂದೆಯನ್ನು ರಕ್ಷಿಸಿದ ಪೊಲೀಸರು

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ರಕ್ಷಿಸಿದ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಮತ್ತವರ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್ ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗಳೊಂದಿಗೆ ತಣ್ಣೀರುಬಾವಿ ಬೀಚ್ ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಈ ವೀಡಿಯೊವನ್ನು ಗಮನಿಸಿ ಸಾರ್ವಜನಿಕರೊಬ್ಬರು ಪಣಂಬೂರು ಉಪವಿಭಾಗದ ಎಸಿಪಿ ಶ್ರೀಕಾಂತ್ ರಿಗೆ ಕಳುಹಿಸಿದ್ದರು. ವೀಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ತಕ್ಷಣ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆ ವೀಡಿಯೊ ಯಾವ ಬೀಚ್ ನಲ್ಲಿ ಚಿತ್ರೀಕರಿಸಿದ್ದು ಎಂದು ಆರಂಭದಲ್ಲಿ ಗೊತ್ತಾಗುತ್ತಿರಲಿಲ್ಲ.
ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ತಂಡಗಳಾಗಿ ಪಣಂಬೂರು, ತಣ್ಣೀರುಬಾವಿ ಬೀಚ್ ಗಳಿಗೆ ತೆರಳಿ ಪರಿಶೀಲಿಸಿದ್ದರು. ಈ ವೇಳೆ ತಣ್ಣೀರುಬಾವಿ ಬೀಚ್ ನಲ್ಲಿ ಗಂಟೆಯ ಹಿಂದೆ ವೀಡಿಯೊದಲ್ಲಿದ್ದ ತಂದೆ-ಮಗಳನ್ನು ನೋಡಿದ್ದಾಗಿ ಸಾರ್ವಜನಿಕರೊಬ್ಬರು ಮಾಹಿತಿ ನೀಡಿದ್ದರು.

ಆ ಮಾಹಿತಿಯನ್ನು ಆಧರಿಸಿ ವಿಚಾರಿಸಿದಾಗ ಅದು ರಾಜೇಶ್ ಎಂದು ತಿಳಿದು ಬಂದಿತ್ತು. ತಕ್ಷಣ ಅವರ ಮೊಬೈಲ್ ನಂಬರ್ ಕಲೆ ಹಾಕಿ ಕರೆ ಮಾಡಿದಾಗ ಅದು ಸ್ವಿಚ್ ಆಫ್‌ ಆಗಿತ್ತು ರಾತ್ರಿ 9:15ರ ಸುಮಾರಿಗೆ ರಾಜೇಶ್ ಮೊಬೈಲ್ ಆನ್ ಆಗಿದೆ ತಕ್ಷಣ ಮೊಬೈಲ್ ಲೊಕೇಶನ್ ಆಧರಿಸಿ ಪಂಜಿಮೊಗರು ಅಂಬಿಕಾ ನಗರದಲ್ಲಿರುವ ಅವರ ಮನೆಗೆ ತೆರಳಿದಾಗ ಬಾಗಿಲು ಮುಚ್ಚಿ ಒಳಗಿನಿಂದ ಚಿಲಕ ಹಾಕಲಾಗಿತ್ತು. ಕಿಟಕಿಯಲ್ಲಿ ನೋಡಿದಾಗ ರಾಜೇಶ್ ಸೀರೆಯಿಂದ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಳ್ಳುವ ಯತ್ನದಲ್ಲಿದ್ದರು. ತಕ್ಷಣ ಪೊಲೀಸರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ.

ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಪಣಂಬೂರು ಪೊಲೀಸರ ಕಾರ್ಯಕ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.