



ಡೈಲಿ ವಾರ್ತೆ: 13/NOV/2025

ಮುಧೋಳ | ಕಬ್ಬು ಬೆಳೆಗಾರರ ರೋಷಾಗ್ನಿ: 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್ ಕಬ್ಬು ಭಸ್ಮ!

ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ.
ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಕಿ ಹಚ್ಚಿ ಆಕ್ರೋಶ:
ಬೆಳಗಾವಿಯಲ್ಲಿ ಧಗಧಗಿಸಿದ್ದ ಕಬ್ಬಿನ ಜ್ವಾಲೆ ತಣ್ಣಗಾಗುತ್ತಿದ್ದಂತೆ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಕಿಡಿ ಹೊತ್ತಿಕೊಂಡಿತ್ತು. ಸರ್ಕಾರ ನಿಗದಿ ಪಡಿಸಿದ 3300 ರೂಪಾಯಿಗೆ ವಿರೋಧ ವ್ಯಕ್ತಪಡಿಸಿದ್ದ ಮುಧೋಳ ರೈತರು ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸಿದ್ದರು. ಇಂದು ಮುಧೋಳ ಪಟ್ಟಣವನ್ನ ಬಂದ್ ಮಾಡಿದ್ದರು.
ಸಕ್ಕರೆ ಕಾರ್ಖಾನೆ ಮಾಲೀಕರೇ ಮಾತುಕತೆ ಬರಬೇಕು. ಪ್ರತಿ ಟನ್ ಕಬ್ಬಿಗೆ 3 ಸಾವಿರದ 500 ರೂಪಾಯಿ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು. ಆದರೆ ಇಂದು ಆಕ್ರೋಶದ ಕಟ್ಟೆ ಹೊಡೆದಿದೆ.
ನಮ್ಮ ಜೊತೆಗೆ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಂದಿಲ್ಲ ಅಂತಾ ಕೆಲ ರೈತರು ಸಿಟ್ಟಾಗಿದ್ದರು. ಸಮೀರವಾಡಿ ಬಳಿಯ ಗೋದಾವರಿ ಕಾರ್ಖಾನೆ ಮೆರವಣಿಗೆ ಹೊರಟಿದ್ದರು. ಬೆಳಗ್ಗೆಯಿಂದಲೇ ಟ್ರ್ಯಾಕ್ಟರ್ ರ್ಯಾಲಿ ಮಾಡಿದ್ದರು. ಸಮೀರವಾಡಿಯ ಗೋಧಾವರಿ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಲು ಹೊರಟಿದ್ದರು. ಆಗ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ ಕಂಡು ಅದನ್ನ ನೆಲಕ್ಕುರುಳಿಸಿ ಬೆಂಕಿ ಹಚ್ಚಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ದೂರವಾಣಿ ಮೂಲಕ ಬಾಗಲಕೋಟೆ ಡಿಸಿ, ಎಸ್ಪಿರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಜೊತೆಯೂ ಫೋನ್ನಲ್ಲಿ ಚರ್ಚೆ ಮಾಡಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.